ಪುಣೆ: ನಾನು ಪ್ರಧಾನಿ ಹುದ್ದೆಯ ರೇಸ್ ನಲ್ಲಿ ಇಲ್ಲ. ಪ್ರತಿಪಕ್ಷಗಳು ದೇಶದ ಒಳಿತಿಗಾಗಿ ಕೆಲಸ ಮಾಡುವ ನಾಯಕತ್ವವನ್ನು ಬಯಸುತ್ತವೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.
ಇತ್ತೀಚೆಗೆ ನಿಧನರಾದ ಪುಣೆ ವಿಶ್ವವಿದ್ಯಾಲಯದ ಉಪಕುಲಪತಿ ರಾಮ್ ತಕವಾಲೆ ಅವರ ಸಂತಾಪ ಸಭೆಯಲ್ಲಿ ಮಾತನಾಡಿದ ಪವಾರ್, ವಿರೋಧ ಪಕ್ಷಗಳು ಒಗ್ಗೂಡಿದರೆ ಯಾರಾದರೂ ಒಬ್ಬರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದು ಸ್ವಲ್ಪ ಕಷ್ಟವಾಗುತ್ತದೆ ಎಂದಿದ್ದಾರೆ.
"ನಾನು ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲವಾದ್ದರಿಂದ ನಾನು ಪ್ರಧಾನಿ ರೇಸ್ನಲ್ಲಿ ಇಲ್ಲ" ಎಂದು ಮಾಜಿ ಕೇಂದ್ರ ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಹಾ ವಿಕಾಸ್ ಅಘಾಡಿಯ ಭಾಗವಾಗಿರುವ ಕಾಂಗ್ರೆಸ್ ಮತ್ತು ಶಿವಸೇನೆ-ಯುಬಿಟಿ ಜೊತೆ ಸೀಟು ಹಂಚಿಕೆ ಕುರಿತು ಮಾತನಾಡಿದ ಅವರು, "ಇತ್ತೀಚೆಗೆ ನನ್ನ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಮಹಾ ವಿಕಾಸ್ ಅಘಾಡಿ ನಾಯಕರು ಈ ಬಗ್ಗೆ ನಿರ್ಧರಿಸುತ್ತಾರೆ" ಎಂದು ಹೇಳಿದರು.
"ಉದ್ಧವ್ ಠಾಕ್ರೆ, ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾನು ಒಟ್ಟಿಗೆ ಕುಳಿತು ಸೀಟು ಹಂಚಿಕೆ ಬಗ್ಗೆ ಹೆಚ್ಚಿನ ಚರ್ಚೆ ನಡೆಸುತ್ತೇವೆ" ಎಂದು ಶರದ್ ಪವಾರ್ ತಿಳಿಸಿದ್ದಾರೆ.
Advertisement