ಹೈದರಾಬಾದ್: ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ಕುರಿತ ಕೇಂದ್ರದ ಸುಗ್ರೀವಾಜ್ಞೆ ವಿವಾದ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೈದರಾಬಾದ್ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿಯಾದರು.
ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಭಾರತ್ ರಾಷ್ಟ್ರ ಸಮಿತಿಯ ಬೆಂಬಲ ಕೋರಿದರು. ಇದು ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಎಂದು ಎಎಪಿ ಹೇಳುತ್ತಿದೆ. ಈ ಸಂದರ್ಭದಲ್ಲಿ ಕೇಜ್ರಿವಾಲ್ ಅವರೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಎಎಪಿ ಸಂಸದರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಉಪಸ್ಥಿತರಿದ್ದರು.
ಸುಗ್ರೀವಾಜ್ಞೆಗೆ ವಿರುದ್ಧ ವಿಪಕ್ಷಗಳಿಂದ ಬೆಂಬಲ ಪಡೆಯಲು ದೆಹಲಿ ಮುಖ್ಯಮಂತ್ರಿ ಮೇ 23 ರಿಂದ ರಾಷ್ಟ್ರವ್ಯಾಪಿ ಪ್ರವಾಸ ಕೈಗೊಂಡಿದ್ದಾರೆ. ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಉಪ ಸಚಿವ ತೇಜಸ್ವಿ ಯಾದವ್ ಅವರನ್ನು ಕೇಜ್ರಿವಾಲ್ ಭೇಟಿ ಮಾಡಿದ್ದರು.
ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ನೀತಿ ಆಯೋಗ ಸಭೆಗೆ ಹಾಜರಾಗುತ್ತಿಲ್ಲ ಎಂದು ಕೇಜ್ರಿವಾಲ್ ತಿಳಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಮಾಡುವ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್ಗೆ ವಿಸ್ತರಿಸುವ ಸುಗ್ರೀವಾಜ್ಞೆಯನ್ನು ಮೇ 19 ರಂದು ಕೇಂದ್ರ ಸರ್ಕಾರ ಹೊರಡಿಸಿತ್ತು. ಇದಾದ ನಂತರ ಕೇಜ್ರಿವಾಲ್ ವಿಪಕ್ಷಗಳ ಮುಖಂಡರನ್ನು ಭೇಟಿಯಾಗಿ ಬೆಂಬಲ ಕೋರುತ್ತಿದ್ದಾರೆ.
Advertisement