ರಾಯ್ಪುರ: ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಉಚಿತ ಶಿಕ್ಷಣ ಮತ್ತು 'ಟೆಂಡು' ಎಲೆ ಸಂಗ್ರಹಿಸುವವರಿಗೆ ವರ್ಷಕ್ಕೆ 4,000 ರೂ. ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಭರವಸೆ ನೀಡಿದ್ದಾರೆ.
ಕಂಕೇರ್ ಜಿಲ್ಲೆಯ ಭಾನುಪ್ರತಾಪುರ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣಗಳಲ್ಲಿ 'ಒಬಿಸಿ'(ಇತರ ಹಿಂದುಳಿದ ವರ್ಗ) ಬಗ್ಗೆ ಪ್ರಸ್ತಾಪಿಸುತ್ತಾರೆ. ಆದರೆ ಜಾತಿ ಗಣತಿಗೆ ಏಕೆ ಹೆದರುವುದು ಏಕೆ? ಎಂದು ಪ್ರಶ್ನಿಸಿದರು. ಅಲ್ಲದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜಾತಿ ಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
"ನಾವು ನಿಮಗಾಗಿ ಒಂದು ಪ್ರಮುಖ ಹೆಜ್ಜೆ ಇಡಲಿದ್ದೇವೆ. ಅದನ್ನು ನಾವು 'ಕೆಜಿ ಟು ಪಿಜಿ' ಎಂದು ಕರೆಯುತ್ತೇವೆ. ಕೆಜಿ (ಶಿಶುವಿಹಾರ) ನಿಂದ ಪಿಜಿ (ಪದವಿ ನಂತರ)ವರೆಗೆ ಸರ್ಕಾರಿ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು. ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕೆ ಒಂದು ಪೈಸೆಯನ್ನೂ ಪಾವತಿಸಬೇಕಾಗಿಲ್ಲ" ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ನವೆಂಬರ್ 7 ರಂದು ಛತ್ತೀಸ್ಗಢ ಮೊದಲ ಹಂತದ ಚುನಾವಣೆ ನಡೆಯಲಿದ್ದು, ನವೆಂಬರ್ 17 ರಂದು ಎರಡನೇ ಹಂತದ ಮತದಾನ ನಡೆಯಲಿದೆ.
Advertisement