ಔರಂಗಬಾದ್ (ಮಹಾರಾಷ್ಟ್ರ): 3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಮಂದಿ ದುರ್ಮರಣವನ್ನಪ್ಪಿರುವ ದುರ್ಘಟನೆ ಛತ್ರಪತಿ ಸಂಬಾಜಿನಗರದ ಕ್ಯಾಂಪ್ ಪ್ರದೇಶದ ಜೈನ ಮಂದಿರದ ಬಳಿ ನಡೆದಿದೆ.
ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ, ಸುದ್ದಿತಿಳಿದು ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕಂಟೋನ್ಮೆಂಟ್ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ನೆಲಮಹಡಿಯಲ್ಲಿದ್ದ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಕುರಿತು ಪೊಲೀಸ್ ಕಮಿಷನರ್ ಮನೋಜ್ ಲೋಹಿಯಾ ಪ್ರತಿಕ್ರಿಯಿಸಿ, ಕಂಟೋನ್ಮೆಂಟ್ ಪ್ರದೇಶದಲ್ಲಿನ ಗಾರ್ಮೆಂಟ್ಸ್ ಅಂಗಡಿಯಲ್ಲಿ ಬೆಳಗಿನ ಜಾವ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಈವೇಳೆ ಗಾಢ ನಿದ್ರೆಯಲ್ಲಿದ್ದ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಮೊದಲಿಗೆ ಆರು ಇದ್ದ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಗೆ ಇನ್ನೂ ಸೂಕ್ತ ಕಾರಣ ತಿಳಿದು ಬಂದಿಲ್ಲ.
ಈಗಾಗಲೇ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದೆ. ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಇದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಎರಡು ಮತ್ತು ಮೂರು ವರ್ಷದ ಮಗು ಕೂಡ ಸಾವನ್ನಪ್ಪಿದ್ದಾರೆ. ಎಲ್ಲ ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement