ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತು ಮುಸ್ಲಿಮರಿಗೆ ಮರುಹಂಚಿಕೆ: ಮೋದಿ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on

ನವದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದ್ದು, ಅವರು ಜನರ ಭಾವನೆಗಳನ್ನು ತಿಳಿಸಿದ್ದಾರೆ ಎಂದು ಸೋಮವಾರ ಪ್ರತಿಪಾದಿಸಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು, ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಹಿಂದಿನ ಕನ್ನಡಿ ತೋರಿಸಿದ್ದರಿಂದ ಪ್ರತಿಪಕ್ಷಗಳು ನೋವು ಅನುಭವಿಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಅವರ ಹೇಳಿಕೆ ಜನರ ಪ್ರತಿಧ್ವನಿಯಾಗಿದೆ. ಏಕೆಂದರೆ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾಗೆ, ದೇಶವಾಸಿಗಳಿಗಿಂತ ಅಕ್ರಮವಾಗಿ ದೇಶ ಪ್ರವೇಶಿಸಿದ ಮುಸ್ಲಿಮರೇ ಹೆಚ್ಚು ಮುಖ್ಯ ಎಂದು ಭಾಟಿಯಾ ಆರೋಪಿಸಿದರು.

ನರೇಂದ್ರ ಮೋದಿ
ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ್ದು ಯಾಕೆ ಗೊತ್ತಾ?

ನಿನ್ನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು "ನುಸುಳುಕೋರರು" ಮತ್ತು "ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ" ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು.

2006ರಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಲ್ಪಸಂಖ್ಯಾತರಿಗೆ, ವಿಶೇಷವಾಗಿ ಮುಸ್ಲಿಮರಿಗೆ ದೇಶದ ಸಂಪನ್ಮೂಲಗಳಲ್ಲಿ ಮೊದಲ ಹಕ್ಕು ಎಂದು ಹೇಳಲಿಲ್ಲವೇ ಎಂದು ಭಾಟಿಯಾ ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಚುನಾವಣಾ ಲಾಭಕ್ಕಾಗಿ ಕೋಮು ಧ್ರುವೀಕರಣ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮಾತನಾಡಿ, ಪ್ರಧಾನಿಯವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದಿದ್ದನ್ನು ಉಲ್ಲೇಖಿಸುತ್ತಿದ್ದಾರೆ ಮತ್ತು ಅವರು ಚುನಾವಣಾ ಲಾಭಕ್ಕಾಗಿ ದೇಶದಲ್ಲಿ "ಕೋಮು ಧ್ರುವೀಕರಣ" ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com