ನವದೆಹಲಿ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.
ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಏ.29 ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿ ತಿಳಿಸಿದ್ದರೂ ಈಗ ಮೇ.06 ರಂದು ವಿಚಾರಣೆಗೆ ಪಟ್ಟಿ ಮಾಡಿದೆ ಎಂದು ವಕೀಲರು ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಸಿಂಘ್ವಿ ಮನವಿಗೆ ಪ್ರತಿಕ್ರಿಯೆ ನೀಡಿರುವ ನ್ಯಾ. ಸಂಜೀವ್ ಖನ್ನಾ ಅವರಿದ್ದ ಪೀಠ, ಇ-ಮೇಲ್ ಕಳಿಸಿ ಅದನ್ನು ಪರಿಗಣಿಸುತ್ತೇವೆ ಎಂದು ಹೇಳಿದೆ.
ಏಪ್ರಿಲ್ 9 ರಂದು ದೆಹಲಿ ಹೈಕೋರ್ಟ್ ನಲ್ಲಿ ತಮ್ಮ ಮನವಿ ತಿರಸ್ಕೃತಗೊಂಡ ಒಂದು ದಿನದ ನಂತರ, ಕೇಜ್ರಿವಾಲ್ ಏಪ್ರಿಲ್ 10 ರಂದು ದೆಹಲಿ ಮದ್ಯ ಹಗರಣದಲ್ಲಿ ತನ್ನ ಬಂಧನ ಮತ್ತು ರಿಮಾಂಡ್ ಅರ್ಜಿಯನ್ನು ವಜಾಗೊಳಿಸುವುದರ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬಂಧನ ಮತ್ತು ಬಂಧನದ ನಿರಾಕರಣೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿದ ಮೇಲ್ಮನವಿಯು ಉನ್ನತ ನ್ಯಾಯಾಲಯದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆಗೆ ಬಾಕಿ ಉಳಿದಿತ್ತು.
ದೆಹಲಿ ಮದ್ಯ ಹಗರಣ ಪ್ರಕರಣದ ತನಿಖಾ ಸಂಸ್ಥೆಯಾಗಿರುವ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್ಗೆ ಪ್ರತಿಕ್ರಿಯೆ ಸಲ್ಲಿಸಿದ್ದು, 9 ಸಮನ್ಸ್ ಜಾರಿಯಿಂದ ತಪ್ಪಿಸಿಕೊಳ್ಳುವ ಮೂಲಕ ಕೇಜ್ರಿವಾಲ್ ತನ್ನನ್ನು ಉಳಿಸಿಕೊಳ್ಳಲು ಹತಾಶವಾಗಿ ಪ್ರಯತ್ನಿಸಿದ್ದಾರೆ ಎಂದು ಹೇಳಿದೆ.
Advertisement
Advertisement