ಪುಣೆ: ಸಂವಿಧಾನವನ್ನು ಬದಲಿಸಲು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಯಸುತ್ತಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.
ಬಾರಾಮತಿ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಪುಣೆಯ ಸಾಸ್ವಾದ್ ತೆಹಸಿಲ್ನಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪವಾರ್, ಈ ವರ್ಷದ ಸಾರ್ವತ್ರಿಕ ಚುನಾವಣೆಯು ಈ ಹಿಂದಿನ ಚುನಾವಣೆಗಳಿಗಿಂತ ಭಿನ್ನವಾಗಿದೆ. ಏಕೆಂದರೆ, ದೇಶವು ಯಾವ ವಿಧಾನದಿಂದ ಕೆಲಸ ಮಾಡುತ್ತದೆ ಎಂಬುದನ್ನು ಅದು ನಿರ್ಧರಿಸುತ್ತದೆ ಎಂದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಅವರು (ಬಿಜೆಪಿ) ಸರ್ವಾಧಿಕಾರದ ಹಾದಿಯಲ್ಲಿ ನಡೆದು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ಆದ್ದರಿಂದ, ನಮ್ಮ ದೇಶವನ್ನು ಉಳಿಸಲು ನಾವು ಅವರನ್ನು ಸೋಲಿಸಬೇಕಾಗಿದೆ ಎಂದು ಅವರು ಹೇಳಿದರು.
ರಾಷ್ಟ್ರವು ಪ್ರಜಾಪ್ರಭುತ್ವದ ಅಡಿಯಲ್ಲಿ ನಡೆಯಬೇಕು. ಆದರೆ, ನಾವು ಚಿಂತಿಸುತ್ತಿದ್ದೇವೆ. ಅವರು (ಬಿಜೆಪಿ) ಸಂವಿಧಾನದಲ್ಲಿ ಬದಲಾವಣೆಗಳನ್ನು ಮಾಡಲು ಈ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಯಸುತ್ತಿದ್ದಾರೆ ಎಂದು ಪವಾರ್ ಹೇಳಿದರು.
ಎನ್ಸಿಪಿ (ಎಸ್ಪಿ) ಹಾಲಿ ಸಂಸದ ಮತ್ತು ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರನ್ನು ಬಾರಾಮತಿಯಿಂದ ಕಣಕ್ಕಿಳಿಸಿದೆ. ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ವಿರುದ್ಧ ಸ್ಪರ್ಧಿಸಿದ್ದಾರೆ.
ನಾನು ಎಲ್ಲಿಗೆ ಹೋದರೂ ಮನುಷ್ಯ ತುರ್ಹಾ ಊದುವ ಚಿಹ್ನೆಯನ್ನು ನಾನು ನೋಡುತ್ತೇನೆ. ಸುಪ್ರಿಯಾ ಸುಳೆಗೆ ಮತ ನೀಡಿ ಮತ್ತು ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿ. ನಾವು ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತೇವೆ ಎಂದರು.
Advertisement