ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಪ್ರಧಾನಿ ಇನ್ನೂ ಮೌನವೇಕೆ- ಪ್ರಿಯಾಂಕಾ ಗಾಂಧಿ

ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡರ ಮೊಮ್ಮಗ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶಾಮೀಲಾಗಿರುವ ಲೈಂಗಿಕ ಹಗರಣದ ಕುರಿತು ಕಾಂಗ್ರೆಸ್ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದ ಬಗ್ಗೆ ಮೌನ ವಹಿಸಿರುವುದೇಕೆ ಎಂದು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
Updated on

ನವದೆಹಲಿ: ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡರ ಮೊಮ್ಮಗ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶಾಮೀಲಾಗಿರುವ ಲೈಂಗಿಕ ಹಗರಣದ ಕುರಿತು ಕಾಂಗ್ರೆಸ್ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದ ಬಗ್ಗೆ ಮೌನ ವಹಿಸಿರುವುದೇಕೆ ಎಂದು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರೊಬ್ಬರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರಿಗೆ ಪತ್ರ ಬರೆದು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಇರುವ ಪೆನ್ ಡ್ರೈವ್‌ನ ಉಪಸ್ಥಿತಿ ಬಗ್ಗೆ ಹೇಳಿದ ನಂತರವೂ ಬಿಜೆಪಿಯು ಜೆಡಿಎಸ್‌ನೊಂದಿಗೆ ಮೈತ್ರಿಗೆ ಏಕೆ ಮುಂದಾಯಿತು ಎಂದು ವಿರೋಧ ಪಕ್ಷ ಕಾಂಗ್ರೆಸ್ ಕೇಳಿದೆ.

ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಎಚ್‌ಡಿ ರೇವಣ್ಣ ಅವರ ಮಗ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಭಾನುವಾರ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.

ಅವರ ಬಳಿ ಕೆಲಸ ಮಾಡಲು ಪ್ರಾರಂಭಿಸಿದ ನಾಲ್ಕು ತಿಂಗಳ ನಂತರ ಪ್ರಜ್ವಲ್ ರೇವಣ್ಣ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಮತ್ತು ಪ್ರಜ್ವಲ್ ತನ್ನ ಮಗಳಿಗೆ ವಿಡಿಯೋ ಕರೆ ಮಾಡಿ 'ಅಶ್ಲೀಲ ಸಂಭಾಷಣೆ' ನಡೆಸುತ್ತಿದ್ದರು ಎಂದು ಅವರ ಅಡುಗೆಯವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಪ್ರಿಯಾಂಕಾ ಗಾಂಧಿ ವಾದ್ರಾ
ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ

ಎಕ್ಸ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್‌ ಮಾಡಿರುವ ಪ್ರಿಯಾಂಕಾ ಗಾಂಧಿ, 'ಪ್ರಧಾನಿ ನರೇಂದ್ರ ಮೋದಿಯವರು ಅವರ ಭುಜದ ಮೇಲೆ ಕೈಯಿಟ್ಟು ಫೊಟೋ ತೆಗೆಸಿಕೊಂಡಿದ್ದ ನಾಯಕ. 10 ದಿನಗಳ ಹಿಂದೆ ಸ್ವತಃ ಪ್ರಧಾನಿಯೇ ಅವರ ಪರವಾಗಿ ಪ್ರಚಾರ ಮಾಡಿದ ನಾಯಕ. ವೇದಿಕೆಯಲ್ಲಿ ಹೊಗಳಿಸಿಕೊಂಡಿದ್ದ ಕರ್ನಾಟಕದ ಆ ನಾಯಕ ಇಂದು ದೇಶದಿಂದ ತಲೆಮರೆಸಿಕೊಂಡಿದ್ದಾರೆ' .

'ಆತ ಮಾಡಿರುವ ಘೋರ ಅಪರಾಧಗಳ ಬಗ್ಗೆ ಕೇಳಿದರೆ ಹೃದಯಕ್ಕೆ ಘಾಸಿಯಾಗುತ್ತದೆ. ಇದು ನೂರಾರು ಮಹಿಳೆಯರ ಜೀವನವನ್ನು ಹಾಳುಮಾಡಿದೆ. ಮೋದಿ ಜೀ, ನೀವು ಇನ್ನೂ ಮೌನವಾಗಿರುತ್ತೀರಾ?' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಪ್ರಶ್ನಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್ 8 ರಂದು ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬರೆದಿದ್ದ ಪತ್ರವನ್ನು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಆ ಪತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಬಗ್ಗೆ ಹೇಳಲಾಗಿತ್ತು. ಹೀಗಿದ್ದರೂ, ಬಿಜೆಪಿ ಇನ್ನೂ ಏಕೆ ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿಸಿದೆ? ಸರಣಿ ಅತ್ಯಾಚಾರದ ವಿಡಿಯೋ ರೆಕಾರ್ಡ್ ಮಾಡಿ ಪೆನ್-ಡ್ರೈವ್‌ನಲ್ಲಿ ಇಟ್ಟಿರುವ ಬಗ್ಗೆ ಏಕೆ ಕ್ರಮ ಕೈಗೊಂಡಿಲ್ಲ? ಈ ವಿಚಾರ ತಿಳಿದಿದ್ದರೂ ಪ್ರಧಾನಿ ಅವರ ಪರ ಪ್ರಚಾರ ಮಾಡಿ, ಪ್ರಜ್ವಲ್ ರೇವಣ್ಣ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ಏಕೆ? ಎಂದು ಕೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಲು ಯಾರು ಸಹಾಯ ಮಾಡಿದರು. ಪ್ರಧಾನಿ ಏಕೆ ಮೌನವಾಗಿದ್ದಾರೆ? ಎಂದು ಖೇರಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com