ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಬುಧವಾರ ಶಿಫಾರಸ್ಸು ಮಾಡಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 24ರಂದು ನಿವೃತ್ತರಾಗಲಿದ್ದು, ಅವರ ಬಳಿಕ ತೆರವಾಗುವ ಸ್ಥಾನಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರನ್ನು ಶಿಫಾರಸ್ಸು ಮಾಡಿದೆ.
"ನ್ಯಾ. ಅಂಜಾರಿಯಾ ಅವರ ಹೆಸರನ್ನು ಶಿಫಾರಸ್ಸು ಮಾಡುವಾಗ, ಕೊಲಿಜಿಯಂ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳಲ್ಲಿ, ನ್ಯಾಯಮೂರ್ತಿ ಆಶಿಶ್ ಜೆ ದೇಸಾಯಿ ಅವರು ಪ್ರಸ್ತುತ ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡಿದೆ. ನ್ಯಾ. ದೇಸಾಯಿ ಅವರ ಮಾತೃ ಹೈಕೋರ್ಟ್ ಗುಜರಾತ್ ಹೈಕೋರ್ಟ್ ಆಗಿದೆ. ನ್ಯಾಯಮೂರ್ತಿ ಆಶಿಶ್ ಜೆ ದೇಸಾಯಿ ಅವರು ಜುಲೈ 4, 2024ರಂದು ಅಧಿಕಾರದಿಂದ ನಿವೃತ್ತರಾಗಲಿದ್ದಾರೆ" ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.
ಎಲ್ಲಾ ಸಂಬಂಧಿತ ಅಂಶಗಳನ್ನು ಗಣನೆಗೆ ತೆಗೆದುಕೊಂಡು, ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಎಲ್ಲಾ ಅಂಶಗಳಲ್ಲಿ ಸೂಕ್ತ ಎಂದು ಪರಿಗಣಿಸಲಾಗಿದೆ ಎಂದು ಕೊಲಿಜಿಯಂ ಹೇಳಿದೆ.
ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ನೇಮಕ ಮಾಡಲು ಪ್ರಸ್ತಾಪಿಸಿದ್ದು, ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ನಿವೃತ್ತಿಯ ನಂತರ ಅಧಿಕಾರವನ್ನು ತ್ಯಜಿಸುವ ದಿನಾಂಕದಿಂದ ಇದು ಜಾರಿಗೆ ಬರುವಂತೆ ಸೂಚಿಸಲಾಗಿದೆ ಎಂದು ಹೇಳಿದೆ.
ಅಂದಹಾಗೆ ನ್ಯಾ. ಅಂಜಾರಿಯಾ ಅವರು 2011ರ ನವೆಂಬರ್ 21ರಂದು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಹೈಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆಯುವ ಮೊದಲು, ಅವರು ಗುಜರಾತ್ ಹೈಕೋರ್ಟ್ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪೆನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವಕೀಲಿಕೆ ಮಾಡಿದ್ದರು ಮತ್ತು ಸಿವಿಲ್ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.
Advertisement