ಕತಾರ್: ಬೇಹುಗಾರಿಕೆ ಆರೋಪದ ಮೇಲೆ ಮರಣ ದಂಡನೆಗೊಳಗಾಗಿದ್ದ 8 ಭಾರತೀಯ ನೌಕಾಪಡೆ ಯೋಧರ ಬಿಡುಗಡೆ

ಜಲಾಂತರ್ಗಾಮಿ ಕಾರ್ಯಕ್ರಮದ ಬೇಹುಗಾರಿಕೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಯೋಧರನ್ನು ಸೋಮವಾರ ಕತಾರ್ ಬಿಡುಗಡೆ ಮಾಡಿದೆ.
ಬಿಡುಗಡೆಯಾದ ನೌಕಾಪಡೆ ಯೋಧರು
ಬಿಡುಗಡೆಯಾದ ನೌಕಾಪಡೆ ಯೋಧರು

ನವದೆಹಲಿ: ಜಲಾಂತರ್ಗಾಮಿ ಕಾರ್ಯಕ್ರಮದ ಬೇಹುಗಾರಿಕೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಯೋಧರನ್ನು ಸೋಮವಾರ ಕತಾರ್ ಬಿಡುಗಡೆ ಮಾಡಿದೆ.

2022ರಲ್ಲಿ ಬಂಧಿಸಲಾಗಿದ್ದ ಭಾರತೀಯ ನೌಕಾಪಡೆಯ 8 ಮಂದಿ ನಿವೃತ್ತ ಅಧಿಕಾರಿಗಳನ್ನು ಕತಾರ್ ಬಿಡುಗಡೆ ಮಾಡಿದೆ. ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಇತ್ತೀಚೆಗೆ ನ್ಯಾಯಾಲಯವು ತೆರವುಗೊಳಿಸಿತ್ತು.

ಇಸ್ರೇಲ್ ಪರವಾಗಿ ಅವರು ಬೇಹುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದಡಿ ಕಳೆದ ಅಕ್ಟೋಬರ್‌ನಲ್ಲಿ ಕತಾರ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು ಎಂದು ಮೂಲಗಳು ತಿಳಿಸಿವೆ. ಆದರೆ, ಅವರ ಮೇಲಿನ ಆರೋಪಗಳನ್ನು ಭಾರತ ಮತ್ತು ಕತಾರ್ ಖಚಿತಪಡಿಸಿಲ್ಲ.

ಕತಾರ್‌ನಲ್ಲಿ ಬೇಹುಗಾರಿಕೆ ಆರೋಪದ ಮೇಲೆ ಮರಣದಂಡನೆ ಶಿಕ್ಷೆಗೊಳಗಾಗಿ ಜೈಲಿನಲ್ಲಿದ್ದ ಎಂಟು ಭಾರತೀಯ ನೌಕಾಪಡೆ ಯೋಧರನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಏಳು ಮಂದಿ ಈ ಮಧ್ಯಪ್ರಾಚ್ಯ ದೇಶದಲ್ಲಿ 18 ತಿಂಗಳ ಜೈಲು ವಾಸದ ನಂತರ ಈಗಾಗಲೇ ಭಾರತಕ್ಕೆ ಮರಳಿದ್ದಾರೆ. ಇದು ಭಾರತದ ರಾಜತಾಂತ್ರಿಕ ಜಾಣ್ಮೆ, ಕತಾರ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಹೊಂದಿರುವ ಸೌಹಾರ್ದ ಸಂಬಂಧಕ್ಕೆ ದೊರೆತ ಜಯವಾಗಿದೆ.

ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ. ಅವರಲ್ಲಿ ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಭಾರತಕ್ಕೆ ವಾಪಸ್ ಆಗಲು 18 ತಿಂಗಳು ಕಾಯಬೇಕಾಯಿತು. ನಾವು ಪ್ರಧಾನಿಗೆ ಅತ್ಯಂತ ಆಭಾರಿಯಾಗಿದ್ದೇವೆ. ಅವರಿಗೆ ಕತಾರ್ ಜೊತೆ ಉತ್ತಮ ಬಾಂಧವ್ಯವಿದ್ದು, ಅವರು ವೈಯಕ್ತಿಕವಾಗಿ ಮಧ್ಯಪ್ರವೇಶ ಮಾಡದೇ ಇದ್ದಿದ್ದರೆ ನಮ್ಮ ಬಿಡುಗಡೆ ಸಾಧ್ಯವಾಗುತ್ತಿರಲಿಲ್ಲ. ನಮ್ಮ ಬಿಡುಗಡೆಗೆ ಬಹಳವಾಗಿ ಶ್ರಮಿಸಿದ ಭಾರತ ಸರ್ಕಾರಕ್ಕೆ ನಮ್ಮ ಹೃದಯಾಂತರಾಳದಿಂದ ಕೃತಜ್ಞತೆ ಸಲ್ಲಿಸುತ್ತೇವೆ’ ಎಂದು ಭಾರತಕ್ಕೆ ಹಿಂದಿರುಗಿದ ನೌಕಾಪಡೆಯ ಮಾಜಿ ಅಧಿಕಾರಿ ಹೇಳಿದ್ದಾರೆ.

ಕತಾರ್‌ನ ಖಾಸಗಿ ಕಂಪನಿಯೊಂದರಲ್ಲಿ ಜಲಾಂತರ್ಗಾಮಿ ನೌಕೆಗೆ ಸಂಬಂಧಿಸಿದ ಯೋಜನೆಗಾಗಿ ಈ 8 ಮಂದಿ ಕೆಲಸ ಮಾಡುತ್ತಿದ್ದರು. 2022ರಲ್ಲಿ ಅವರನ್ನು ಬೇಹುಗಾರಿಕೆ ಆರೋಪದಡಿ ಬಂಧಿಸಲಾಗಿತ್ತು.8 ಲಕ್ಷಕ್ಕೂ ಅಧಿಕ ಭಾರತೀಯರು ಕತಾರ್‌ನಲ್ಲಿ ಕೆಲಸ ಮತ್ತು ಇನ್ನಿತರ ಕಾರಣಗಳಿಂದ ವಾಸಿಸುತ್ತಿದ್ದಾರೆ. ಭಾರತಕ್ಕೆ ನೈಸರ್ಗಿಕ ಅನಿಲ ಸರಬರಾಜು ರಾಷ್ಟ್ರಗಳಲ್ಲಿ ಕತಾರ್ ಪ್ರಮುಖವಾಗಿದೆ.

ಜಲಾಂತರ್ಗಾಮಿ ಕಾರ್ಯಕ್ರಮದ ಮೇಲೆ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಪೂರ್ಣೇಂದು ತಿವಾರಿ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಸಂಜೀವ್ ಗುಪ್ತಾ, ಕಮಾಂಡರ್ ಅಮಿತ್ ನಾಗ್ಪಾಲ್ ಮತ್ತು ನಾವಿಕ ರಾಗೇಶ್ ಅವರನ್ನು ಆಗಸ್ಟ್‌ನಲ್ಲಿ ಬಂಧಿಸಿ ಜೈಲಿನಲ್ಲಿಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com