ರೈತರ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟ್‌ಗಳು, ಖಾತೆಗಳ ನಿರ್ಬಂಧಕ್ಕೆ ಕೇಂದ್ರ ಸರ್ಕಾರ ಆದೇಶ; X ಅಸಮ್ಮತಿ

ಈಗ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್‌ಗಳನ್ನು ನಿರ್ಬಂಧಿಸುವ ಭಾರತ ಸರ್ಕಾರದ ಆದೇಶಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಗುರುವಾರ ಅಸಮ್ಮತಿ ವ್ಯಕ್ತಪಡಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನವದೆಹಲಿ: ಈಗ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್‌ಗಳನ್ನು ನಿರ್ಬಂಧಿಸುವ ಭಾರತ ಸರ್ಕಾರದ ಆದೇಶಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಗುರುವಾರ ಅಸಮ್ಮತಿ ವ್ಯಕ್ತಪಡಿಸಿದೆ.

ಗೃಹ ಸಚಿವಾಲಯದ ಕೋರಿಕೆಯ ಮೇರೆಗೆ ರೈತರ ಪ್ರತಿಭಟನೆಗೆ ಸಂಬಂಧಿಸಿದ 177 ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮ ವೇದಿಕೆಯು ನಿರ್ದಿಷ್ಟ ಬಳಕೆದಾರ ಖಾತೆಗಳು ಮತ್ತು ಪೋಸ್ಟ್‌ಗಳನ್ನು ನಿರ್ಬಂಧಿಸಬೇಕು ಎಂದು ಭಾರತ ಸರ್ಕಾರ ಕಾರ್ಯನಿರ್ವಾಹಕ ಆದೇಶಗಳನ್ನು ಹೊರಡಿಸಿದ್ದು, ಈ ನಿರ್ದೇಶನಗಳನ್ನು ಅನುಸರಿಸಲು ವಿಫಲವಾದರೆ, ಭಾರಿ ದಂಡ ಮತ್ತು ಜೈಲು ಶಿಕ್ಷೆ ಸೇರಿದಂತೆ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಸರ್ಕಾರದ ಈ ಆದೇಶವನ್ನು ಪಾಲಿಸುವುದಕ್ಕಾಗಿ, 'ನಾವು ಭಾರತದಲ್ಲಿ ಮಾತ್ರ ಈ ಖಾತೆಗಳು ಮತ್ತು ಪೋಸ್ಟ್‌ಗಳಿಗೆ ನಿರ್ಬಂಧ ವಿಧಿಸುತ್ತೇವೆ. ಆದರೆ, ಈ ಕ್ರಮವನ್ನು ನಾವು ಒಪ್ಪುವುದಿಲ್ಲ ಮತ್ತು ಈ ಪೋಸ್ಟ್‌ಗಳಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವಿಸ್ತರಿಸಬೇಕು' ಎಂದು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಭಾರತ ಸರ್ಕಾರದ ಯಾವುದೇ ಖಾತೆಗಳು ಅಥವಾ ಪೋಸ್ಟ್‌ಗಳನ್ನು ನಿರ್ಬಂಧಿಸುವ ಆದೇಶವನ್ನು ಪ್ರಶ್ನಿಸುವ ರಿಟ್ ಮೇಲ್ಮನವಿ ಬಾಕಿ ಉಳಿದಿದೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಸರ್ಕಾರದ ಈ ಆದೇಶವನ್ನು ಸಾರ್ವಜನಿಕಗೊಳಿಸುವಂತೆ ಎಕ್ಸ್ ಕರೆ ನೀಡಿದೆ.

ಸಾಮಾಜಿಕ ಮಾಧ್ಯಮ ಸಂಸ್ಥೆಯು ತನ್ನ ಬಳಕೆದಾರರಿಗೆ ಕಂಪನಿಯ ನೀತಿಗಳಿಗೆ ಅನುಗುಣವಾಗಿ ಸರ್ಕಾರದ ಕ್ರಮಗಳ ಸೂಚನೆಯನ್ನು ಒದಗಿಸಿದೆ.

ಪ್ರಾತಿನಿಧಿಕ ಚಿತ್ರ
ಪ್ರತಿಭಟನಾ ನಿರತ ರೈತ ಸಾವು: ದೆಹಲಿ ಚಲೋ ಮೆರವಣಿಗೆ 2 ದಿನ ಮುಂದೂಡಿಕೆ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಕೃಷಿ ಸಾಲಮನ್ನಾ ಸೇರಿದಂತೆ ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈಮಧ್ಯೆ, ಪಂಜಾಬ್-ಹರಿಯಾಣ ಗಡಿಯಲ್ಲಿನ ಪ್ರತಿಭಟನಾ ಸ್ಥಳವೊಂದರಲ್ಲಿ ರೈತರೊಬ್ಬರು ಸಾವಿಗೀಡಾದ ಮತ್ತು ಸುಮಾರು 12 ಪೊಲೀಸ್ ಸಿಬ್ಬಂದಿ ಗಾಯಗೊಂಡ ಹಿನ್ನೆಲೆಯಲ್ಲಿ ರೈತ ಮುಖಂಡರು ರಾಷ್ಟ್ರ ರಾಜಧಾನಿಗೆ ತೆರಳುವ 'ದೆಹಲಿ ಚಲೋ'ಗೆ ಎರಡು ದಿನಗಳ ಕಾಲ ತಡೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com