ಇಂಫಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಮಣಿಪುರ ಸರ್ಕಾರ ಬುಧವಾರ ಅನುಮತಿ ನೀಡಿದೆ. ಆದರೆ ಯಾತ್ರೆಯಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸಿದೆ.
ಇಂಫಾಲ್ನ ಹಪ್ತಾ ಕಾಂಗ್ಜೆಬಂಗ್ ಮೈದಾನದಿಂದ ಯಾತ್ರೆ ಆರಂಭಿಸಲು ಅನುಮತಿ ನೀಡುವಂತೆ ಕಾಂಗ್ರೆಸ್ ಮನವಿ ಮಾಡಿದ ಎಂಟು ದಿನಗಳ ನಂತರ ಮಣಿಪುರ ಸರ್ಕಾರದಿಂದ ಅನುಮತಿ ದೊರೆತಿದೆ.
ಇಂಫಾಲ್ ಪೂರ್ವ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಹೊರಡಿಸಿದ ಆದೇಶದಲ್ಲಿ, "ಯಾವುದೇ ಅಹಿತಕರ ಘಟನೆ ಮತ್ತು ಕಾನೂನು, ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಜನವರಿ 14 ರಂದು ಸೀಮಿತ ಸಂಖ್ಯೆಯಲ್ಲಿ ಯಾತ್ರೆ ನಡೆಸಲು ಅನುಮತಿಸಲಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಭಾಗವಹಿಸುವವರ ಸಂಖ್ಯೆ ಮತ್ತು ಹೆಸರನ್ನು ಈ ಕಛೇರಿಗೆ ಮುಂಚಿತವಾಗಿ ಒದಗಿಸಬೇಕು ಎಂದು ಹೇಳಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆಯ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆ ಇದೆ ಎಂದು ಇಂಫಾಲ್ ಪೂರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ನೀಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಬೃಹತ್ ಸಭೆಯು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಬಹುದು. ಹೀಗಾಗಿ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಸೆಕ್ಷನ್ 144 ಸಿಆರ್ ಪಿಸಿ ಅಡಿಯಲ್ಲಿ ನಿಷೇಧ ಜಾರಿಯಲ್ಲಿರಲಿದೆ" ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಜನವರಿ 14 ರಂದು ಪ್ರಾರಂಭವಾಗಲಿರುವ ಈ ಯಾತ್ರೆಯು 6,713 ಕಿಲೋಮೀಟರ್ ದೂರ ಕ್ರಮಿಸಲಿದೆ.
Advertisement