ದೇಶ ಉದ್ದೇಶಿಸಿ ರಾಷ್ಟ್ರಪತಿ ಭಾಷಣ: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗೆ ಮುರ್ಮು ಶ್ಲಾಘನೆ

75ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಗುರುವಾರ ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶವು  ಅಮೃತ ಕಾಲದ ಆರಂಭಿಕ ವರ್ಷಗಳಲ್ಲಿದೆ. ಇದು ಪರಿವರ್ತನೆಯ ಸಮಯ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: 75ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಗುರುವಾರ ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶವು  ಅಮೃತ ಕಾಲದ ಆರಂಭಿಕ ವರ್ಷಗಳಲ್ಲಿದೆ. ಇದು ಪರಿವರ್ತನೆಯ ಸಮಯ ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ದಿ. ಕರ್ಪೂರಿ ಠಾಕೂರ್ ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿರುವುದು ಮತ್ತು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ಐತಿಹಾಸಿಕ ಮತ್ತು ಮಹತ್ವದ ಕ್ಷಣವೆಂದು ಶ್ಲಾಘಿಸಿದರು.

ಭಗವಾನ್ ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ನಿರ್ಮಿಸಲಾದ ಭವ್ಯ ರಾಮ ಮಂದಿರದಲ್ಲಿ ಸ್ಥಾಪಿಸಲಾದ ವಿಗ್ರಹದ ಪ್ರತಿಷ್ಠಾಪನೆಯ ಐತಿಹಾಸಿಕ ಸಮಾರಂಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಭವಿಷ್ಯದಲ್ಲಿ ಈ ಘಟನೆಯನ್ನು ವಿಶಾಲ ದೃಷ್ಟಿಕೋನದಲ್ಲಿ ನೋಡಿದಾಗ, ಇತಿಹಾಸಕಾರರು ಭಾರತವನ್ನು ನೆನಪಿಸಿಕೊಳ್ಳುತ್ತಾರೆ.

ಕರ್ಪೂರಿ ಜೀ ಅವರು ತಮ್ಮ ಕೊಡುಗೆಯಿಂದ ಸಾರ್ವಜನಿಕ ಜೀವನವನ್ನು ಮತ್ತಷ್ಟು ಶ್ರೀಮಂತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಕರ್ಪೂರಿ ಜೀ ಅವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದು, ಜನರ ಕಲ್ಯಾಣಕ್ಕಾಗಿ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.

ನಮ್ಮ ದೇಶವು ಸ್ವಾತಂತ್ರ್ಯದ ಶತಮಾನದತ್ತ ಸಾಗುತ್ತಿದೆ. ಇದರೊಂದಿಗೆ ಅಮೃತ ಕಾಲದ ಆರಂಭಿಕ ಹಂತವನ್ನು ಹಾದುಹೋಗುತ್ತಿದೆ. ಇದು ಯುಗ ಬದಲಾವಣೆಯ ಅವಧಿ. ಗಣರಾಜ್ಯೋತ್ಸವವು ನಮ್ಮ ಮೂಲ ಮೌಲ್ಯಗಳು ಮತ್ತು ತತ್ವಗಳನ್ನು ನೆನಪಿಡುವ ಪ್ರಮುಖ ಸಂದರ್ಭವಾಗಿದೆ. ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ.

ನಾರಿ ಶಕ್ತಿ ವಂದನ್ ಅಧಿನಿಯಮ್ ಮಹಿಳಾ ಸಬಲೀಕರಣಕ್ಕೆ ಕ್ರಾಂತಿಕಾರಿ ಸಾಧನವಾಗಿದೆ ಎಂದು ನಾನು ನಂಬುತ್ತೇನೆ. ನಮ್ಮ ಆಡಳಿತದ ಪ್ರಕ್ರಿಯೆಗಳನ್ನು ಸುಧಾರಿಸುವಲ್ಲಿ ಇದು ಪ್ರಮುಖ ವಹಿಸುತ್ತದೆ ಎಂದು ರಾಷ್ಟ್ರಪತಿಗಳು ಹೇಳಿದ್ದಾರೆ.

ಅಮೃತ ಕಾಲ ಅವಧಿಯು ಅಭೂತಪೂರ್ವ ತಾಂತ್ರಿಕ ಬದಲಾವಣೆಗಳ ಅವಧಿಯಾಗಿದೆ. ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯಂತಹ ತಾಂತ್ರಿಕ ಪ್ರಗತಿಗಳು ನಮ್ಮ ದೈನಂದಿನ ಜೀವನದ ಭಾಗವಾಗುತ್ತಿವೆ ಎಂದು ದ್ರೌಪದಿ ಮುರ್ಮು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com