ಚೆನ್ನೈ: ತಮಿಳುನಾಡು ಸರ್ಕಾರ 75ನೇ ಗಣರಾಜ್ಯೋತ್ಸವದಲ್ಲಿ ಖ್ಯಾತ ಫ್ಯಾಕ್ಟ್ ಚೆಕ್ಕರ್ ಹಾಗೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಜುಬೇರ್ ಅವರಿಗೆ 2024ನೇ ಸಾಲಿನ ‘ಕೊಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿ’ ನೀಡಿ ಗೌರವಿಸಿದೆ.
ಮಾರ್ಚ್ 2023ರಲ್ಲಿ ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂಬ ಸುಳ್ಳು ಸುದ್ದಿಯೊಂದು ಹಬ್ಬಿತ್ತು. ಆದರೆ ಇದೊಂದು ಸುಳ್ಳು ಸುದ್ದಿ ಎಂದು ಜುಬೈರ್ ಅವರು ಸತ್ಯ ಬಯಲು ಮಾಡಿದ್ದರು. ಈ ಮೂಲಕ ಹಿಂಸಾಚಾರವನ್ನು ತಡೆಗಟ್ಟುವಲ್ಲಿ ಅವರು ನೀಡಿದ ಕೊಡುಗೆಯನ್ನು ಗುರುತಿಸಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕೋಮು ಸೌಹಾರ್ದ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಿದರು.
ಇಂದು ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಆಲ್ಟ್ನ್ಯೂಸ್ನ ಸಹ ಸಂಸ್ಥಾಪಕ ಜುಬೈರ್ ಅವರಿಗೆ ಸ್ಟಾಲಿನ್ ಕೋಮು ಸೌಹಾರ್ದ ಪ್ರಶಸ್ತಿ ಪ್ರದಾನ ಮಾಡಿದರು.
"ಕೋಮು ಸೌಹಾರ್ದತೆ ಕಾಪಾಡುವಲ್ಲಿ ಜುಬೇರ್ ಅವರು ಸಲ್ಲಿಸಿದ ಸೇವೆ ಶ್ಲಾಘಿಸಿ, ಅವರಿಗೆ 2024ನೇ ಸಾಲಿನ ಕೊಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿಯನ್ನು ನೀಡಲಾಗುತ್ತದೆ" ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಕೋಮು ಸೌಹಾರ್ದತೆಯನ್ನು ಉತ್ತೇಜಿಸಲು ತಮಿಳುನಾಡು ಸರ್ಕಾರ 2000ರಲ್ಲಿ ಕೊಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿಯನ್ನು ಸ್ಥಾಪಿಸಿತು.
Advertisement