ವೈದ್ಯಕೀಯ ಆಧಾರದ ಮೇಲೆ ಜಾಮೀನು ವಿಸ್ತರಣೆ ಕೋರಿದ ಕೇಜ್ರಿವಾಲ್ ಮನೆಗೆ ಆಂಬುಲೆನ್ಸ್ ಕೊಂಡೊಯ್ದ ಬಿಜೆಪಿ ನಾಯಕ!
ನವದೆಹಲಿ: ಕೆಲವು ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದು, ವೈದ್ಯಕೀಯ ಆಧಾರದ ಮೇಲೆ ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಂತರ ಎಂದು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಬಿಜೆಪಿಯ ಹಿರಿಯ ನಾಯಕ ವಿಜಯ್ ಗೋಯೆಲ್ ಅವರು ಶನಿವಾರ ಆಂಬುಲೆನ್ಸ್ ಕೊಂಡೊಯ್ದಿದ್ದಾರೆ.
ಕೇಜ್ರಿವಾಲ್ ಅವರು ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕು ಎಂಬ ಕಾರಣ ನೀಡಿ ತಮ್ಮ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ ವಿಸ್ತರಿಸಬೇಕೆಂದು ಕೋರಿ ಮೇ 26 ರಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಕೇಜ್ರಿವಾಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಬಿಜೆಪಿ ನಾಯಕ ಗೋಯೆಲ್ ಅವರು, ಇಲ್ಲಿನ ಸಿವಿಲ್ ಲೈನ್ಸ್ನಲ್ಲಿರುವ ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಆಂಬ್ಯುಲೆನ್ಸ್ ತೆಗೆದುಕೊಂಡು ಹೋಗಿದ್ದಾರೆ. ಆದರೆ ಪೊಲೀಸರು ಮಾರ್ಗಮಧ್ಯೆ ಆಂಬ್ಯುಲೆನ್ಸ್ ಮತ್ತು ಗೋಯೆಲ್ ಅವರನ್ನು ತಡೆದರು.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಮೇ 10 ರಂದು ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು.
ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ಏಳು ಹಂತದ ಚುನಾವಣೆಯ ಕೊನೆಯ ಹಂತ ಮುಗಿದ ಒಂದು ದಿನದ ನಂತರ ಜೂನ್ 2 ರಂದು ಶರಣಾಗಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಜನರ ಸಹಾನುಭೂತಿ ಗಳಿಸಲು ಕೇಜ್ರಿವಾಲ್ ಅವರು ಆರೋಗ್ಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಾಟಕವಾಡುತ್ತಿದ್ದಾರೆ ಎಂದು ಗೋಯಲ್ ಆರೋಪಿಸಿದ್ದಾರೆ. "ಈ ಆಂಬ್ಯುಲೆನ್ಸ್ ಕೇಜ್ರಿವಾಲ್ ಅವರನ್ನು ಯಾವುದೇ ಆಸ್ಪತ್ರೆಗೆ ಬೇಕಾದರೂ ಕರೆದೊಯ್ಯಲಿದೆ. ಅಲ್ಲಿ ಅವರ ಎಲ್ಲಾ ಪರೀಕ್ಷೆಗಳನ್ನು ಎರಡರಿಂದ ನಾಲ್ಕು ಗಂಟೆಗಳ ಒಳಗೆ ಮಾಡಿಸಿಕೊಳ್ಳಬಹುದು" ಎಂದು ಗೋಯೆಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ‘ನಾಟಕ’ವನ್ನು ನಿಲ್ಲಿಸಬೇಕು ಮತ್ತು ಅವರ ಆರೋಗ್ಯದ ಬಗ್ಗೆ ಕಾಳಜಿ ಇದ್ದರೆ ತಮ್ಮೊಂದಿಗೆ ಪರೀಕ್ಷೆಗೆ ಬರಬೇಕು ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ