ಕೋಲ್ಕತಾ: ಸಂದೇಶ್ಖಾಲಿ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ ನಾಯಕ ಷಹಜಹಾನ್ ಶೇಖ್ ಅವರ ಬ್ಯಾಂಕ್ ಠೇವಣಿ, ಅಪಾರ್ಟ್ಮೆಂಟ್ ಮತ್ತು ಸಂದೇಶಖಾಲಿ ಹಾಗೂ ಕೋಲ್ಕತ್ತಾದಲ್ಲಿನ ಕೃಷಿ ಜಮೀನು ಸೇರಿದಂತೆ ಒಟ್ಟು 12.78 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ತಿಳಿಸಿದೆ.
ಷಹಜಹಾನ್ ಶೇಖ್ ಅವರ ಆಸ್ತಿಗಳನ್ನು ಜಪ್ತಿ ಮಾಡಲು ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಜನವರಿ 5 ರಂದು ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಗೆ ತೆರಳಿದ್ದ ಇಡಿ ತಂಡದ ಮೇಲೆ ಶೇಖ್ ಬೆಂಬಲಿಗರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಪ್ರಕರಣ ಸಂಬಂಧ ಫೆಬ್ರವರಿ 29 ರಂದು ಷಹಜಹಾನ್ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದರು.
ಬಂಧನದ ನಂತರ ಟಿಎಂಸಿ ನಾಯಕನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
Advertisement