ನವದೆಹಲಿ: ಉತ್ತರ ದೆಹಲಿಯ ಇಂದರ್ಲೋಕ್ ಪ್ರದೇಶದ ಜನನಿಬಿಡಿ ರಸ್ತೆಯೊಂದರಲ್ಲಿ ಶುಕ್ರವಾರ ನಮಾಜ್ ಮಾಡುತ್ತಿದ್ದವರಿಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕಾಲಿನಿಂದ ಒದೆಯುತ್ತಿರುವ ವಿಡಿಯೋ ವೈರಲ್ ಆಗಿ ವ್ಯಾಪಕ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಯಿತು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ರಾಜಕೀಯ ಮುಖಂಡರು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಜನರು ಸಬ್ ಇನ್ಸ್ಪೆಕ್ಟರ್ ಮನೋಜ್ ಕುಮಾರ್ ತೋಮರ್ ಅವರ ಕೃತ್ಯವನ್ನು ಖಂಡಿಸಿದರು. ನಂತರ ಆ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಇಂದರ್ಲೋಕ್ ಮೆಟ್ರೋ ನಿಲ್ದಾಣದ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಶುಕ್ರವಾರದ ಪ್ರಾರ್ಥನೆಯ ವೇಳೆ ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿ ಕಾಲಿನಿಂದ ಒದೆಯುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೂಡಲೇ ಗುಂಪು ಪೊಲೀಸ್ ಅಧಿಕಾರಿಯನ್ನು ಸುತ್ತುವರೆದು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿತು. ದೆಹಲಿ ಕಾಂಗ್ರೆಸ್ ಈ ಘಟನೆಯನ್ನು "ನಾಚಿಕೆಗೇಡು" ಎಂದು ಕಿಡಿಕಾರಿತ್ತು. ಘಟನೆ ಬಗ್ಗೆ ತನಿಖೆ ಕೈಗೊಂಡ ನಂತರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
Advertisement