ನೂತನ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಕಾರ, ಅರ್ಜಿ ವಜಾ!
ನವದೆಹಲಿ: ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದ್ದು, ಚುನಾವಣೆ ಸಮೀಪಿಸುತ್ತಿರುವ ಕಾರಣ ಇದು ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣವಾಗುತ್ತದೆ ಎಂದು ಹೇಳಿದೆ.
ಚುನಾವಣಾ ಆಯೋಗವು "ಕಾರ್ಯನಿರ್ವಾಹಕರ ಅಧೀನದಲ್ಲಿ ಇಲ್ಲ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಛೇರಿಯ ನಿಯಮಗಳು) ಕಾಯ್ದೆ 2023ಕ್ಕೆ ಯಾವುದೇ ಮಧ್ಯಂತರ ತಡೆ ನೀಡಲು ನಿರಾಕರಿಸಿತು. 2023 ರ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸುವ ಪ್ರಮುಖ ಅರ್ಜಿಗಳನ್ನು ಪರಿಶೀಲಿಸುವುದಾಗಿ ಹೇಳಿದ ಸುಪ್ರೀಂ ಕೋರ್ಟ್, ಆರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ ಮತ್ತು ಆಗಸ್ಟ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ.
'ಈ ಹಂತದಲ್ಲಿ, ನಾವು ಶಾಸನವನ್ನು ತಡೆಹಿಡಿಯಲು ಅಥವಾ ಅದರ ಕಾರ್ಯಾಚರಣೆಯನ್ನು ಅಮಾನತುಗೊಳಿಸುವುದಿಲ್ಲ. ಇದು ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣವಾಗುತ್ತದೆ ಮತ್ತು ಮಧ್ಯಂತರ ಆದೇಶದ ಮೂಲಕ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಹೊಸ ಚುನಾವಣಾ ಆಯುಕ್ತರ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯ ಪೀಠ. ಹೊಸ ಕಾನೂನನ್ನು ಪ್ರಶ್ನಿಸಿರುವ ಅರ್ಜಿದಾರರಿಗೆ ತಿಳಿಸಿತು. ಹೊಸ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು. ನೇಮಕಾತಿಗೆ ತಡೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠ ಹೇಳಿತು.
ಚುನಾವಣಾ ಆಯುಕ್ತರು ಸ್ವತಂತ್ರ ಮತ್ತು ನ್ಯಾಯಸಮ್ಮತವಾಗಿರಬೇಕು ಎಂಬುದನ್ನು ಅಲ್ಲಗಳೆಯಲಾಗದು. ಸ್ವಾತಂತ್ರ್ಯದ ನಂತರ ಚುನಾವಣೆಗಳು ನಡೆದಿದ್ದು, ದೇಶ ಈ ಹಿಂದೆ ಉತ್ತಮ ಚುನಾವಣಾ ಆಯುಕ್ತರನ್ನು ಹೊಂದಿತ್ತು. ಹಿಂದೆ ಚುನಾವಣಾ ಆಯುಕ್ತರನ್ನು ಕಾರ್ಯಕಾರಿಣಿಯಿಂದ ನೇಮಕ ಮಾಡಲಾಗುತ್ತಿತ್ತು ಮತ್ತು ಈಗ ಅವರನ್ನು ಕಾನೂನಿನ ಅಡಿಯಲ್ಲಿ ನೇಮಿಸಲಾಗುತ್ತಿದೆ ಎಂದು ನ್ಯಾಯಪೀಠ ತಿಳಿಸಿತು.