ನವದೆಹಲಿ: ಲೋಕಸಭಾ ಚುನಾವಣೆಯ 3 ನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕಾಂಗ್ರೆಸ್ ಅಮೇಥಿ ಹಾಗೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ.
ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು ಇನ್ನು 24-30 ಗಂಟೆಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡುವುದಾಗಿ ಹೇಳಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಮೇಥಿ, ರಾಯ್ ಬರೇಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಅಧಿಕಾರ ನೀಡಿದೆ ಎಂದು ಹೇಳಿದ್ದಾರೆ.
ನನ್ನ ನಿರೀಕ್ಷೆಯ ಪ್ರಕಾರ ಇನ್ನು 24-30 ಗಂಟೆಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಕ್ಷವೇ ಅಧಿಕೃತವಾಗಿ ಪ್ರಕಟಿಸುವವರೆಗೂ ಯಾವುದೇ ಘೋಷಣೆಗಳು ಬಂದರೂ ಅದು ನಕಲಿ ಘೋಷಣೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಏಕೆ ಮತ್ತು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ "ಹೆದರಿಕೆ" ಹೊಂದಿದೆಯೇ? ಎಂಬ ಪ್ರಶ್ನೆಗೆ ರಮೇಶ್ ಪ್ರತಿಕ್ರಿಯೆ ನೀಡಿದ್ದು "ಯಾವುದೇ ವಿಳಂಬವಿಲ್ಲ, ರಾಯಬರೇಲಿಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಲಿಲ್ಲವೇ? ಸ್ಮೃತಿ ಇರಾನಿ ಹಾಲಿ ಸಂಸದೆ. ಯಾರೂ ಹೆದರುವುದಿಲ್ಲ, ಚರ್ಚೆಗಳು ನಡೆಯುತ್ತಿವೆ, ಕಾಂಗ್ರೆಸ್ ಅಧ್ಯಕ್ಷರಿಗೆ ಅಧಿಕಾರ ನೀಡಲಾಗಿದೆ ಎಂದಷ್ಟೇ ಹೇಳಿದ್ದಾರೆ.
Advertisement