ನವದೆಹಲಿ: ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ನೇತೃತ್ವದ ದ್ವಿಸದಸ್ಯ ಪೀಠ, ಕೇಜ್ರಿವಾಲ್ ಪರ ಅಭಿಷೇಕ್ ಮನು ಸಿಂಘ್ವಿ ಮತ್ತು ಜಾರಿ ನಿರ್ದೇಶನಾಲಯದ ಎಸ್ ವಿ ರಾಜು ಅವರ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ಸಂದರ್ಭದಲ್ಲಿ ಈ ಸೂಚನೆ ನೀಡಿದೆ.
ಆದರೆ, ಅವರಿಗೆ ಮಧ್ಯಂತರ ಜಾಮೀನು ನೀಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ವಿಚಾರಣೆಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆ ಇಲ್ಲದಿದ್ದರೆ ಮಧ್ಯಂತರ ಜಾಮೀನು ಮಂಜೂರು ಮಾಡುವ ಬಗ್ಗೆ ಪರಿಗಣಿಸಬಹುದು ಎಂದು ಎಲ್ಲಾ ಪಕ್ಷಗಳ ಪರವಾಗಿ ಹಾಜರಾಗುವ ವಕೀಲರಿಗೆ ಮಾತ್ರ ತಿಳಿಸುವುದಾಗಿ ಹೇಳಿದೆ.
ಇಡಿ ಮತ್ತು ಕೇಜ್ರಿವಾಲ್ ಎರಡೂ ಕಡೆಯ ವಕೀಲರಿಗೆ ಜಾಮೀನು ನೀಡುವ ಬಗ್ಗೆ ಪರಿಗಣಿಸುವಂತೆ ಕೇಳಿಕೊಂಡಿದೆ ಮತ್ತು ಈ ಪ್ರಕರಣ ಸಾಕಷ್ಟು ಸಮಯ ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯ ಮೌಖಿಕವಾಗಿ ಗಮನಿಸಿದ್ದು, ನಾವು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಹಂತದಲ್ಲಿ ಮಧ್ಯಂತರ ಜಾಮೀನು ನೀಡುವುದನ್ನು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮುಂದಿನ ವಿಚಾರಣೆಯನ್ನು ಮೇ 7ಕ್ಕೆ ಸುಪ್ರೀಂ ಕೋರ್ಟ್ ನಿಗದಿಪಡಿಸಿದೆ.
ಪ್ರಕರಣದಲ್ಲಿ ಕೇಜ್ರಿವಾಲ್ ಅವರು ನಿರಪರಾಧಿ ಎಂದು ಪ್ರತಿಪಾದಿಸಿದ ಸಿಂಘ್ವಿ, ನ್ಯಾಯಸಮ್ಮತವಲ್ಲದ ಬಂಧನಗಳನ್ನು ತಡೆಯಲು PMLA ಅಡಿಯಲ್ಲಿ ಕೆಲವು ಸುರಕ್ಷತೆಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. ಇಡಿ ನಿಷ್ಪಕ್ಷಪಾತವಾಗಿ ಮತ್ತು ನ್ಯಾಯಯುತವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದ ಮೇಲೆ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತಮ್ಮ ಬಂಧನ ಪ್ರಶ್ನಿಸಿ ಕೆಳ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸಿದ್ದ ಕೇಜ್ರಿವಾಲ್, ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
Advertisement