ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಇದು ಬಿಜೆಪಿಯ ಮತ್ತೊಂದು ಪಿತೂರಿ ಎಂದು ಆಮ್ ಆದ್ಮಿ ಪಕ್ಷ ಸೋಮವಾರ ಕಿಡಿ ಕಾರಿದೆ.
ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ ಮುಖ್ಯಮಂತ್ರಿ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ್ದಾರೆ ಎಂದು ಎಎಪಿ ಆರೋಪಿಸಿದೆ.
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ರಾಜಕೀಯ ದೇಣಿಗೆ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಎನ್ಐಎ ತನಿಖೆ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೆನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ.
"ಈ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು, ಇದು ಬಿಜೆಪಿಯ ಆಜ್ಞೆಯ ಮೇರೆಗೆ ಕೇಜ್ರಿವಾಲ್ ವಿರುದ್ಧದ ಮತ್ತೊಂದು ಪಿತೂರಿಯಾಗಿದೆ. ಅವರು ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಸೋಲುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭಯದಿಂದ ಕಂಗೆಟ್ಟಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.
Advertisement