ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್ ಮೇ 10 ರಂದು ಆದೇಶ ನೀಡಲಿದೆ.
ತಮ್ಮ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ನೇತೃತ್ವದ ದ್ವಿಸದಸ್ಯ ಪೀಠ, ನಾವು ಶುಕ್ರವಾರ ಮಧ್ಯಂತರ ಆದೇಶ(ಮಧ್ಯಂತರ ಜಾಮೀನಿನ ಮೇಲೆ) ಪ್ರಕಟಿಸುತ್ತೇವೆ ಎಂದು ಹೇಳಿದೆ.
ಶುಕ್ರವಾರದಂದು ನಾವು ಮಧ್ಯಂತರ ಆದೇಶ ನೀಡುತ್ತೇವೆ. ಅದೇ ದಿನ ಬಂಧನಕ್ಕೆ ಸಂಬಂಧಿಸಿದ ಅರ್ಜಿಯ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಖನ್ನಾ ಅವರು ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಟರ್ ಜನರಲ್ ಎಸ್ ವಿ ರಾಜು ಅವರಿಗೆ ತಿಳಿಸಿದ್ದಾರೆ.
ಮೇ 7 ರಂದು, ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠ ದೆಹಲಿ ಸಿಎಂ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನಿನ ತೀರ್ಪನ್ನು ಕಾಯ್ದಿರಿಸಿತ್ತು.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದ ಮೇಲೆ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತಮ್ಮ ಬಂಧನ ಪ್ರಶ್ನಿಸಿ ಕೆಳ ನ್ಯಾಯಾಲಯಗಳಲ್ಲಿ ಅರ್ಜಿ ಸಲ್ಲಿಸಿದ್ದ ಕೇಜ್ರಿವಾಲ್, ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
Advertisement