
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚುನಾವಣಾ ರ್ಯಾಲಿಯಲ್ಲಿ ಪತ್ರಕರ್ತರೊಬ್ಬರಿಗೆ ಥಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ರಾಯ್ ಬರೇಲಿಯಲ್ಲಿ ಗೃಹ ಸಚಿವರ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಪತ್ರಕರ್ತ ರಾಘವೇಂದ್ರ ತ್ರಿವೇದಿ ಅವರನ್ನು ಬಿಜೆಪಿಯವರು ಥಳಿಸಿದ್ದಾರೆ. ಅಮಿತ್ ಶಾ ಮಾತನಾಡುತ್ತಲೇ ಇದ್ದರು. ಪೊಲೀಸರು ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದರು. ರ್ಯಾಲಿಯಲ್ಲಿ ಪಾಲ್ಗೊಳ್ಳಲು ಹಣ ನೀಡಲಾಗಿದ್ದ ಎಂದು ಹೇಳುತ್ತಿದ್ದ ಕೆಲ ಮಹಿಳೆಯರೊಂದಿಗೆ ಪತ್ರಕರ್ತ ಮಾತನಾಡುತ್ತಿದ್ದರಿಂದ ಅವರನ್ನು ಥಳಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಇಡೀ ದೇಶದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಿದ ಬಿಜೆಪಿಯವರಿಗೆ ತಮ್ಮ ವಿರುದ್ಧ ಧ್ವನಿ ಎತ್ತುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಸಂವಿಧಾನ ರದ್ದುಗೊಳಿಸಲು ಅಭಿಯಾನ ನಡೆಸುತ್ತಿರುವ ಬಿಜೆಪಿ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕೊನೆಗಾಣಿಸಿ ಜನರ ದನಿ ಕಿತ್ತುಕೊಳ್ಳಲು ಹೊರಟಿದೆ ಎಂದು ಅವರು ಕಿಡಿಕಾರಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ರಕರ್ತರ ವೀಡಿಯೊವನ್ನು ಪ್ರಿಯಾಂಕಾ ಗಾಂಧಿ ಹಂಚಿಕೊಂಡಿದ್ದಾರೆ.
Advertisement