
ಶ್ರೀನಗರ: ನೂತನವಾಗಿ ರಚನೆಯಾದ ಜಮ್ಮು-ಕಾಶ್ಮೀರ ಸರ್ಕಾರದಲ್ಲಿ ಒಮರ್ ಅಬ್ದುಲ್ಲಾ ನೇತೃತ್ವದ ಸಚಿವ ಸಂಪುಟವನ್ನು ಸೇರದಿರಲು ಕಾಂಗ್ರೆಸ್ ನಿರ್ಧರಿಸಿದೆ. ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ಮರು ಸ್ಥಾಪಿಸದಿರುವುದು ಪಕ್ಷದ ಅಸಮಾಧಾನಕ್ಕೆ ಕಾರಣ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ವೇಳೆಯಲ್ಲಿ ಭರವಸೆ ನೀಡಿರುವಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಂತೆ ಕಾಂಗ್ರೆಸ್ ಬಲವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ.
ಆದರೆ, ನಮ್ಮ ಬೇಡಿಕೆ ಈಡೇರಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವುದರಿಂದ ಈ ಈ ಸಮಯದಲ್ಲಿ ಸಚಿವ ಸಂಪುಟವನ್ನು ಸೇರುತ್ತಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆದಾಗ್ಯೂ, ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟವನ್ನು ಕಾಂಗ್ರೆಸ್ ಮುಂದುವರೆಸಲಿದೆ ಎಂದು ಕರ್ರಾ ಹೇಳಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಒಮರ್ ಅಬ್ದುಲ್ಲಾ ಅವರ ಜೊತೆಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನೂತನ ಶಾಸಕರಾದ ಸಕೀನಾ ಮಸೂದ್ (ಇಟೂ), ಜಾವೇದ್ ದಾರ್, ಜಾವೇದ್ ರಾಣಾ, ಸುರೀಂದರ್ ಚೌಧರಿ ಮತ್ತು ಸತೀಶ್ ಶರ್ಮಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Advertisement