
ಇಂದೋರ್: ಶಿವನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆ ಧಕ್ಕೆ ತಂದ ಆರೋಪದ ಮೇಲೆ ಮಧ್ಯಪ್ರದೇಶ ಶಿಯೋಪುರದ ಕಾಂಗ್ರೆಸ್ ಶಾಸಕ ಬಾಬು ಜಂಡೆಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ನ ಕಾನೂನು ಕೋಶದ ಮಾಳವ ಪ್ರಾಂತ್(ಇಂದೋರ್-ಉಜ್ಜಯಿನಿ ವಿಭಾಗ) ಸಂಚಾಲಕ ಮತ್ತು ವಕೀಲ ಅನಿಲ್ ನಾಯ್ಡು ಅವರು ನೀಡಿದ ದೂರಿನ ಆಧಾರದ ಮೇಲೆ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ(ಬಿಎನ್ಎಸ್) ಸೆಕ್ಷನ್ 299(ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಮತ್ತು 302(ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪಿಟಿಐ ಜೊತೆ ಮಾತನಾಡಿದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಹಂಸರಾಜ್ ಸಿಂಗ್, ಶಿವನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಶಿಯೋಪುರದಲ್ಲಿ ಜಂಡೆಲ್ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಇಂದೋರ್ನಲ್ಲಿ ದಾಖಲಾಗಿರುವ ಪ್ರಕರಣವನ್ನು ಮೂಲ ಎಫ್ಐಆರ್ನೊಂದಿಗೆ ಲಗತ್ತಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮಾಧ್ಯಮ ವರದಿಗಳಲ್ಲಿ ಕಾಣಿಸಿಕೊಂಡಿರುವ ವಿಡಿಯೋವನ್ನು ಉಲ್ಲೇಖಿಸಿ, ನಾಯ್ಡು ಅವರು ತಮ್ಮ ದೂರಿನಲ್ಲಿ ಶಿವನನ್ನು ನಿಂದಿಸಲಾಗಿದೆ. ಇದರಿಂದ ತಮ್ಮಂತಹ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದಿದ್ದಾರೆ.
Advertisement