
ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರವಾಹದಿಂದಾಗಿ ಪರಿಸ್ಥಿತಿ ಹದಗೆಟ್ಟಿದ್ದು, ಜನಜೀವನ ದುಸ್ತರವಾಗಿದೆ. ಇದೇ ವೇಳೆ ಎರಡೂ ರಾಜ್ಯಗಳ ಸರ್ಕಾರಗಳು ಪರಿಹಾರ ಕಾರ್ಯದಲ್ಲಿ ತೊಡಗಿವೆ. ಇದೀಗ ದಕ್ಷಿಣ ಭಾರತದ ಸೂಪರ್ ಸ್ಟಾರ್ ಜೂನಿಯರ್ ಎನ್ ಟಿಆರ್ ಜನರ ಸಹಾಯಕ್ಕೆ ಕೈ ಚಾಚಿದ್ದು 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಈ ಹಿಂದೆ, ಕಲ್ಕಿ 2898 ಎಡಿ ನಿರ್ಮಾಪಕರು ಪ್ರವಾಹ ಪೀಡಿತ ಜನರಿಗೆ ಸಹಾಯ ಮಾಡಲು ಆಂಧ್ರ ಪ್ರದೇಶ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಜೂನಿಯರ್ ಎನ್ ಟಿಆರ್ ದೇಣಿಗೆ ನೀಡಿದ್ದಾರೆ.
ಟಾಲಿವುಡ್ ಸ್ಟಾರ್ ಜೂನಿಯರ್ ಎನ್ಟಿಆರ್ ಜನರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಕ್ಕೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡೂ ರಾಜ್ಯಗಳು ಜಲಾವೃತವಾಗಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಜನರು ತಮ್ಮ ಕೆಲಸಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ವಿಜಯವಾಡದಲ್ಲಿ ಅರ್ಧದಷ್ಟು ಮನೆಗಳು ಮುಳುಗಿದ್ದು ಜನರು ತಮ್ಮ ಮನೆಗಳನ್ನು ತೊರೆಯುವ ಅನಿವಾರ್ಯತೆ ಇದೆ.
ಜೂನಿಯರ್ NTR ಇಂದು ಸೆಪ್ಟೆಂಬರ್ 3ರಂದು ಬೆಳಿಗ್ಗೆ ತಮ್ಮ X ಹ್ಯಾಂಡಲ್ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಿಂದಾಗಿ ನನಗೆ ತುಂಬಾ ನೋವಾಗಿದೆ. ಇದೆಲ್ಲವೂ ಶೀಘ್ರದಲ್ಲೇ ಪರಿಹಾರವಾಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಂತಹ ಪರಿಸ್ಥಿತಿಯಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರವು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಒದಗಿಸಬೇಕು ಎಂದು ಈ ಕುರಿತು ಬರೆದಿದ್ದಾರೆ. ಅವರ ಜೀವನವನ್ನು ಮತ್ತೆ ಹಳಿಗೆ ತರಲು ನಾನು 50-50 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರವಾಹದಲ್ಲಿ 27 ಜನರು ಪ್ರಾಣ ಕಳೆದುಕೊಂಡಿದ್ದು 17 ಸಾವಿರಕ್ಕೂ ಹೆಚ್ಚು ಜನರನ್ನು ಆಶ್ರಯಕ್ಕೆ ಕರೆತರಲಾಗಿದೆ. ಇದರಿಂದಾಗಿ 140 ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಹಲವರ ಮಾರ್ಗಗಳನ್ನು ಬದಲಿಸಲಾಗಿದೆ.
Advertisement