ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಿ: ಕಾಂಗ್ರೆಸ್

ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ಮರಣೋತ್ತರ ಭಾರತ ರತ್ನ ನೀಡಿ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.
ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ
Updated on

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ಮರಣೋತ್ತರ ಭಾರತ ರತ್ನ ನೀಡಿ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಶ್ರೀ ಶಿವಕುಮಾರ ಸ್ವಾಮೀಜಿ ಅವರು ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಎನಿಸಿದ್ದಾರೆ. ಸಿದ್ಧಗಂಗಾ ಶ್ರೀಗಳು ಇಡೀ ದೇಶಕ್ಕೇ ಮಾದರಿ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಲಿಂಗೈಕ್ಯ ಶ್ರೀಗಳಿಗೆ ಆದ್ಯತೆ ನೀಡಬೇಕು. ಅವರಿಗೆ ಮರಣೋತ್ತರ ಭಾರತ ರತ್ನ ನೀಡಿ ಎಂದು ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಶಿವಕುಮಾರ ಸ್ವಾಮೀಜಿ ಅವರು ಈ ಶತಮಾನ ಕಂಡ ಅಪರೂಪದ ಶರಣರಾಗಿದ್ದವರು. ಶ್ರೀಗಳು ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ಮೂಲಕ ತ್ರಿವಿಧ ದಾಸೋಹವನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಮಾಡಿದರು. ಯಾವುದೇ ಜಾತಿ, ಧರ್ಮ ಭೇದ ಮಾಡಿದೆ ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಹಾಯ ಬೇಡಿ ಬಂದ ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಹಾರ ನೀಡಿ ಸಮಾಜದಲ್ಲಿ ಒಂದು ಉತ್ತಮ ಸ್ಥಾನವನ್ನು ಹಾಗೂ ಹೆಸರು ಗಳಿಸುವಂತೆ ಮಾಡಿದವರು ಅವರು ಎಂದು ರಣದೀಪ್ ಸುರ್ಜೇವಾಲಾ ವಿವರಣೆ ನೀಡಿದ್ದಾರೆ.

ಶಿವಕುಮಾರ ಸ್ವಾಮೀಜಿ ಅವರು ನಿಜವಾಗಿಯೂ ಭಾರತದ ಅಮೂಲ್ಯ ರತ್ನ, ಕರ್ನಾಟಕದ ಈ ಮಹಾನ್‌ ಪುರುಷ ಶಿವಕುಮಾರ್ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಬೇಕೆನ್ನುವುದು ನನ್ನ ಭಾವನೆ. ಇದು ಆರೂವರೆ ಕೋಟಿ ಕನ್ನಡಿಗರ ಮಹಾಭಿಲಾಷೆಯೂ ಆಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿರುವ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಿಸಿದ ಬೆನ್ನಲ್ಲೇ ಇದೀಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಿ ಎಂಬ ಕೂಗು ಜೋರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com