ಚಂಡೀಗಢ: ರೈತರ 'ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆ ದೃಷ್ಟಿಯಿಂದ ಹರಿಯಾಣ ಸರ್ಕಾರವು ಮಂಗಳವಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬಲ್ಕ್ ಎಸ್ಎಂಎಸ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಈ ಜಿಲ್ಲೆಗಳಾಗಿವೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಮಂಗಳವಾರ ಎರಡು ಗಡಿ ಪಾಯಿಂಟ್ ಗಳಲ್ಲಿ ಪ್ರತಿಭಟನಾಕಾರರು ರಾಷ್ಟ್ರ ರಾಜಧಾನಿಗೆ ಹೋಗುವುದನ್ನು ತಡೆಯಲು ಹರಿಯಾಣ ಪೊಲೀಸರು ಹಾಕಿದ ಬ್ಯಾರಿಕೇಡ್ಗಳನ್ನು ಮುರಿಯಲು ಪ್ರಯತ್ನಿಸಿದಾಗ ಪೊಲೀಸರು ಅಶ್ರುವಾಯು ಸಿಡಿಸಿದರು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಸಾಲ ಮನ್ನಾ ಸೇರಿದಂತೆ ತಮ್ಮ ಬೇಡಿಕೆಗಳಿಗಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆ ನಡೆಸುತ್ತಿವೆ.
ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಜಿಲ್ಲೆಯ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಯಲ್ಲಿ ಪರಿಸ್ಥಿತಿಗಳು ಇನ್ನೂ ಗಂಭೀರ ಮತ್ತು ಉದ್ವಿಗ್ನವಾಗಿವೆ. ಸುಳ್ಳು ವದಂತಿಗಳನ್ನು ಹರಡುವ ಮೂಲಕ ಅಂತರ್ಜಾಲ ಸೇವೆಗಳ ದುರುಪಯೋಗದ ಕಾರಣದಿಂದಾಗಿ ಸಾರ್ವಜನಿಕ ಆಸ್ತಿ, ಪಾಸ್ತಿಗಳಿಗೆ ಹಾನಿ ಮತ್ತು ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವುಂಟಾಗುವ ಸ್ಪಷ್ಟ ಸಂಭಾವ್ಯತೆ ಇದೆ ಎಂದು ಹರಿಯಾಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿವಿಎಸ್ ಎನ್ ಪ್ರಸಾದ್ ಆದೇಶದಲ್ಲಿ ತಿಳಿಸಿದ್ದಾರೆ.
ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್ ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಧ್ವನಿ ಕರೆಗಳನ್ನು ಹೊರತುಪಡಿಸಿ ಮೊಬೈಲ್ ನೆಟ್ವರ್ಕ್ಗಳಲ್ಲಿ ಒದಗಿಸಲಾದ ಮೊಬೈಲ್ ಇಂಟರ್ನೆಟ್ ಸೇವೆಗಳು, ಬೃಹತ್ SMS (ಬ್ಯಾಂಕಿಂಗ್ ಮತ್ತು ಮೊಬೈಲ್ ರೀಚಾರ್ಜ್ ಹೊರತುಪಡಿಸಿ) ಮತ್ತು ಎಲ್ಲಾ ಡಾಂಗಲ್ ಸೇವೆಗಳನ್ನು ಫೆ.15ರವರೆಗೆ ಸ್ಥಗಿತಗೊಳಿಸಲಾಗಿದೆ. ಈ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಹರಿಯಾಣದ ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರಿಗೆ ನಿರ್ದೇಶನ ನೀಡಲಾಗಿದೆ.
Advertisement