ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ 'ಸುಪ್ರೀಂ'

2002ರಲ್ಲಿ ನಡೆದ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಅವಧಿಪೂರ್ವ ಬಿಡುಗಡೆಗೆ ಅನುಮತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: 2002ರಲ್ಲಿ ನಡೆದ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಅವಧಿಪೂರ್ವ ಬಿಡುಗಡೆಗೆ ಅನುಮತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. 

ಅಲ್ಲದೆ, ಪ್ರಕರಣದ ನಿರ್ದಿಷ್ಟ ವಿವರಗಳು ಮತ್ತು ಸಂದರ್ಭಗಳನ್ನು ಎಚ್ಚರಿಕೆಯಿಂದ ಪರಿಗಣಿಸದೆ, ಈ ತೀರ್ಪನ್ನು ಏಕರೂಪವಾಗಿ ನೀಡಲಾಗಿದೆ. ಈ ನಿರ್ಧಾರವನ್ನು ಪ್ರಕಟಿಸುವಾಗ ನ್ಯಾಯಾಲಯವು ಹೆಚ್ಚು ಸೂಕ್ಷ್ಮ ಮತ್ತು ಚಿಂತನಶೀಲ ವಿಧಾನವನ್ನು ಅಳವಡಿಸಿಕೊಂಡಿಲ್ಲ ಎಂದಿದೆ. 

ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಪ್ರಕರಣದ ಅಪರಾಧಿಗಳು ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ.

ಪ್ರಕರಣದ 11 ಅಪರಾಧಿಗಳಿಗಳ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮುನ್ನವೇ ಅವರನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಪೀಠ, ಗುಜರಾತ್ ಸರ್ಕಾರವು ಶಿಕ್ಷೆ ರದ್ದುಗೊಳಿಸಿ ಹೊರಡಿಸಿರುವ ಆದೇಶವು ಸೂಕ್ತವಲ್ಲ ಎಂದು ಹೇಳಿದೆ.

'ನಾವು ಇತರ ಪ್ರಕರಣಗಳ ಅಂಶಗಳನ್ನು ಪರಿಶೀಲಿಸುವ ಅಗತ್ಯವಿಲ್ಲ.  ಆದರೆ, ಅವರು ಪ್ರಕರಣವನ್ನು ಪೂರ್ಣಗೊಳಿಸುವುದಕ್ಕಾಗಿ ಹಾಗೆ ಮಾಡಿದ್ದಾರೆ. ಗುಜರಾತ್ ಸರ್ಕಾರವು ತಾನು ಹೊಂದಿರದ ಅಧಿಕಾರವನ್ನು ಚಲಾಯಿಸಿದ್ದು, ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಹೀಗಾಗಿ, ಗುಜರಾತ್ ಸರ್ಕಾರವು ಹೊರಡಿಸಿದ ಕ್ಷಮಾಪಣೆಯ ಆದೇಶಗಳನ್ನು ರದ್ದುಗೊಳಿಸಲಾಗುವುದು' ಎಂದು ಪೀಠವು ತನ್ನ 100 ಪುಟಗಳ ತೀರ್ಪನ್ನು ಉಚ್ಚರಿಸುವಾಗ ಹೇಳಿದೆ.

ಸುಪ್ರೀಂ ಕೋರ್ಟ್ ತನ್ನ ಮೇ 13, 2022 ರಂದು ಮತ್ತೊಂದು ಪೀಠ ನೀಡಿರುವ ಆದೇಶವನ್ನು 'ಅಸಿಂಧು' ಎಂದು ಪರಿಗಣಿಸಿತು. ಗುಜರಾತ್ ಸರ್ಕಾರವು ಅಪರಾಧಿಗಳ ಕ್ಷಮಾಪಣೆ ಅರ್ಜಿಯಲ್ಲಿ ಉದ್ದೇಶಪೂರ್ವಕವಾಗಿ ಪ್ರಮುಖ ಸಂಗತಿಗಳನ್ನು ಮರೆಮಾಚಿದೆ. ತಪ್ಪು ಮಾಹಿತಿಯನ್ನು ಪ್ರಸ್ತುತಪಡಿಸುವ ಮೂಲಕ ನ್ಯಾಯಾಲಯದಲ್ಲಿ ಈ ಆದೇಶವನ್ನು ಪಡೆದಿದೆ ಎಂದು ಹೇಳಿದೆ.

'ಇದೊಂದು ಪ್ರಮುಖ ಪ್ರಕರಣವಾಗಿದ್ದು, ಅಪರಾಧಿಗಳಿಗೆ ಕ್ಷಮಾಪಣೆ ನೀಡುವ ಮೂಲಕ ನ್ಯಾಯಾಲಯದ ಆದೇಶವನ್ನು ಬಳಸಿ ಕಾನೂನಿನ ನಿಯಮವನ್ನು ಉಲ್ಲಂಘಿಸಲಾಗಿದೆ'. ಮೇ 13, 2022ರ ಆದೇಶವನ್ನಿಟ್ಟುಕೊಂಡು ಅಧಿಕಾರ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

'ಗುಜರಾತ್ ಸರ್ಕಾರದ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಈ ಆಧಾರದ ಮೇಲೆ ನಾವು ಅಪರಾಧಿಗಳಿಗೆ ನೀಡಿರುವ ಕ್ಷಮಾಪಣೆ ಆದೇಶಗಳನ್ನು ರದ್ದುಗೊಳಿಸುತ್ತೇವೆ' ಎಂದು ಪೀಠ ಹೇಳಿದೆ.

ಬಿಲ್ಕಿಸ್ ಬಾನು ಅವರು ಸಲ್ಲಿಸಿರುವ ಅರ್ಜಿ ಸೇರಿದಂತೆ ಇತರ ಅರ್ಜಿಗಳಿಗೆ ಸಂಬಂಧಿಸಿದಂತೆ 11 ದಿನಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ವರ್ಷ ಅಕ್ಟೋಬರ್ 12 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ತೀರ್ಪನ್ನು ಕಾಯ್ದಿರಿಸುವಾಗ, 11 ಅಪರಾಧಿಗಳಿಗೆ ಶಿಕ್ಷೆಯ ವಿನಾಯಿತಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಅಕ್ಟೋಬರ್ 16 ರೊಳಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಗುಜರಾತ್ ಸರ್ಕಾರಕ್ಕೆ ಸೂಚಿಸಿತ್ತು.

ಆರೋಪ ಸಾಬೀತಾಗಿ 11 ಅಪರಾಧಿಗಳು 15ಕ್ಕೂ ಹೆಚ್ಚು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. ಗುಜರಾತ್ ಸರ್ಕಾರ ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆಗೆ ಅನುಮತಿ ನೀಡಿತ್ತು. ಹೀಗಾಗಿ 2022ರ ಆಗಸ್ಟ್ 15ರಂದು ಅವರೆಲ್ಲರೂ ಗೋಧ್ರಾ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದರು.

ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಂತ್ರಸ್ತೆ ಬಿಲ್ಕಿಸ್ ಬಾನು ಅವರು ಕಳೆದ ವರ್ಷ ನವೆಂಬರ್ 30 ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಪರಾಧಿಗಳ ಬಿಡುಗಡೆಯು ಸಮಾಜದ ಆತ್ಮಸಾಕ್ಷಿಯನ್ನು ಅಲ್ಲಾಡಿಸಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com