ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆಯೇ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು, “ಸರಿಯಾದ ಪ್ರಾಮುಖ್ಯತೆ” ನೀಡದಿದ್ದರೆ ರಾಜ್ಯದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಮ್ಮ ಪಕ್ಷ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಪಕ್ಷದ ಮುರ್ಷಿದಾಬಾದ್ ಜಿಲ್ಲಾ ಘಟಕದ ಸಾಂಸ್ಥಿಕ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಇದು ಅಲ್ಪಸಂಖ್ಯಾತ ಜನಸಂಖ್ಯೆಯನ್ನು ಹೆಚ್ಚು ಹೊಂದಿರುವ ಪ್ರದೇಶವಾಗಿದೆ ಮತ್ತು ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದೆ.
ಸಭೆಯಲ್ಲಿ, ಜಿಲ್ಲೆಯ ಎಲ್ಲಾ ಮೂರು ಲೋಕಸಭಾ ಸ್ಥಾನಗಳಲ್ಲಿ ಟಿಎಂಸಿ ಜಯಭೇರಿ ಬಾರಿಸುವ ಅಗತ್ಯವನ್ನು ಒತ್ತಿ ಹೇಳಿದ ಮಮತಾ, ಚುನಾವಣಾ ಸಮರಕ್ಕೆ ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಕರೆ ನೀಡಿದರು.
"ನಮ್ಮ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರು, ಟಿಎಂಸಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಪಶ್ಚಿಮ ಬಂಗಾಳದಲ್ಲಿ ನಮ್ಮನ್ನು ಹೊರಗಿಟ್ಟು ಆರ್ಎಸ್ಪಿ, ಸಿಪಿಐ, ಸಿಪಿಐ(ಎಂ)ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ, ನಾವು ನಮ್ಮ ದಾರಿ ನೋಡಿಕೊಳ್ಳುತ್ತೇವೆ ಮತ್ತು ಎಲ್ಲಾ 42 ಸ್ಥಾನಗಳಲ್ಲಿ ಹೋರಾಡಲು ಮತ್ತು ಗೆಲ್ಲಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತೇವೆ” ಎಂದು ಹೇಳಿರುವುದಾಗಿ ಹೆಸರು ಹೇಳಲು ಇಚ್ಚಿಸಿದ ಟಿಎಂಸಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
Advertisement