ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ನಿರ್ಗಮಿಸುವ ಮೂಲಕ ತಪ್ಪು ಮಾಡಿದ್ದಾರೆ. ಅವರ ಈ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.
ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಮತ್ತೆ ಬಿಜೆಪಿಯೊಂದಿಗೆ ಸರ್ಕಾರ ರಚಿಸಿದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, "ಇದು ತಪ್ಪು ಎಂದು ನಾನು ಭಾವಿಸುತ್ತೇನೆ ಮತ್ತು ಅವರು ಪ್ರತಿಪಕ್ಷಗಳೊಂದಿಗಿನ ಮೈತ್ರಿ ಮುರಿದುಕೊಳ್ಳಬಾರದಿತ್ತು. ಇಂತಹ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ" ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕೇಜ್ರಿವಾಲ್ ನೇತೃತ್ವದ ಎಎಪಿ ಇಂಡಿಯಾ ಮೈತ್ರಿಕೂಟ ಭಾಗವಾಗಿದೆ ಮತ್ತು ಐದು ರಾಜ್ಯಗಳಾದ ದೆಹಲಿ, ಪಂಜಾಬ್, ಗುಜರಾತ್, ಗೋವಾ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್ನೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸುತ್ತಿದೆ
ನಿತೀಶ್ ಕುಮಾರ್ ಅವರು ಭಾನುವಾರ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ 'ಮಹಾಘಟಬಂಧನ್' ಜೊತೆ ಮೈತ್ರಿ ಮುರಿದುಕೊಂಡಿದ್ದರು ಮತ್ತು ಬಿಜೆಪಿ ಬೆಂಬಲದೊಂದಿಗೆ ಮತ್ತೆ ಹೊಸ ಸರ್ಕಾರ ರಚಿಸಿದ್ದರು.
Advertisement