
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶ(ಎನ್ಸಿಆರ್)ನಲ್ಲಿ ಪಟಾಕಿಗಳ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟ ನಿಷೇಧವನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ, ಬೀದಿಗಳಲ್ಲಿ ಕೆಲಸ ಮಾಡುವ ದೊಡ್ಡ ಜನಸಂಖ್ಯೆಯ ಜನ ವಾಯು ಮಾಲಿನ್ಯದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಇನ್ನು ತಮ್ಮ ಮನೆಗಳಲ್ಲಿ ಎಲ್ಲರೂ ಏರ್ ಪ್ಯುರಿಫಯರ್ ಗಳನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.
ದೆಹಲಿ-ಎನ್ಸಿಆರ್ನಲ್ಲಿ ಪಟಾಕಿಗಳ ನಿಷೇಧ ಆದೇಶ ಮಾರ್ಪಡಿಸುವಂತೆ ಕೋರಿ ಪಟಾಕಿ ಕಂಪನಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹಲವು ತಿಂಗಳಿಂದ ಹದಗೆಟ್ಟ ಸ್ಥಿತಿಯಲ್ಲಿಯೇ ಇದೆ. ಹೀಗಿರುವಾಗ ಪಟಾಕಿ ನಿಷೇಧ ಸಾಧ್ಯವೆ ಇಲ್ಲ ಎಂದು ಹೇಳಿದೆ.
ಪಟಾಕಿಗಳಿಂದ ಉಂಟಾಗಿರುವ ಈ ಮಾಲಿನ್ಯ ಕಮ್ಮಿ ಆಗಿದೆ ಎಂದು ನಮಗೆ ಅನ್ನಿಸದ ಹೊರತು ನಾವು ಈ ಹಿಂದಿನ ಆದೇಶಗಳನ್ನು ರದ್ದುಗೊಳಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Advertisement