
ನವದೆಹಲಿ: ಭಾರತ 22 ಲಕ್ಷ ನುರಿತ ಚಾಲಕರ ಕೊರತೆಯನ್ನು ಎದುರಿಸುತ್ತಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಲೋಕಸಭೆಗೆ ತಿಳಿಸಿದ್ದಾರೆ. ಅಲ್ಲದೆ ಚಾಲಕರಿಗೆ ಸೂಕ್ತ ತರಬೇತಿ ಸೌಲಭ್ಯಗಳ ಕೊರತೆಯು ಅನೇಕ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಒತ್ತಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ, ಚಾಲಕರಿಗೆ ತರಬೇತಿ ಸಂಸ್ಥೆಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ 4,500 ಕೋಟಿ ರೂ. ಯೋಜನೆ ಪ್ರಾರಂಭಿಸಿದೆ ಎಂದು ಗಡ್ಕರಿ ತಿಳಿಸಿದರು.
ವಿಶ್ವಬ್ಯಾಂಕ್ ವರದಿಯ ಪ್ರಕಾರ, ಭಾರತದಲ್ಲಿ 22 ಲಕ್ಷ ಚಾಲಕರ ಕೊರತೆಯಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಸೂಕ್ತ ಚಾಲನಾ ತರಬೇತಿ ಸೌಲಭ್ಯಗಳ ಕೊರತೆಯೂ ಇದೆ. ಇದು ಅನೇಕ ಅಪಘಾತಗಳು ಮತ್ತು ಸಾವುಗಳಿಗೆ ಕಾರಣವಾಗಿದೆ ಎಂದು ಸಾರಿಗೆ ಸಚಿವರು ತಿಳಿಸಿದರು.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ದೇಶಾದ್ಯಂತ ಚಾಲನಾ ತರಬೇತಿ ಸಂಸ್ಥೆಗಳನ್ನು ಹಂತ ಹಂತವಾಗಿ ಸ್ಥಾಪಿಸಲು 4,500 ಕೋಟಿ ರೂ.ಗಳ ಯೋಜನೆ ಆರಂಭಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಂತಹ 1,600 ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ಇದರಿಂದ 60 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಗಡ್ಕರಿ ಹೇಳಿದರು.
ಕ್ಲಸ್ಟರ್ ವಿಧಾನವನ್ನು ಒಳಗೊಂಡಂತೆ ಚಾಲನಾ ತರಬೇತಿ ಮತ್ತು ಸಂಶೋಧನಾ ಸಂಸ್ಥೆ(IDTRs), ಪ್ರಾದೇಶಿಕ ಚಾಲನಾ ತರಬೇತಿ ಕೇಂದ್ರಗಳು(RDTCs) ಮತ್ತು ಚಾಲನಾ ತರಬೇತಿ ಕೇಂದ್ರಗಳು (DTCs) ಸ್ಥಾಪನೆಗೆ ಸೂಕ್ತ ಪ್ರಸ್ತಾವನೆಗಳನ್ನು ಕಳುಹಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು.
ಪ್ರತಿ ವರ್ಷ ಸುಮಾರು 1.8 ಲಕ್ಷ ಜನ ರಸ್ತೆ ಅಪಘಾತಗಳಲ್ಲಿ ಸಾಯುತ್ತಿದ್ದಾರೆ ಮತ್ತು ಅವರಲ್ಲಿ ಹಲವರು ತರಬೇತಿ ಪಡೆಯದ ಚಾಲಕರಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಸಚಿವರು ಹೇಳಿದರು.
Advertisement