

ಜಮ್ಮು: ಜಮ್ಮು ಮತ್ತು ಕಾಶ್ಮಿರದ ಅಖ್ನೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಶುಕ್ರವಾರ ತಡರಾತ್ರಿ ಅಖ್ನೂರ್ ಖೇರಿ ಭಟ್ಟಲ್ ಪ್ರದೇಶದ ಮುಂಭಾಗದ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವನಗಳು ಪತ್ತೆಯಾಗಿತ್ತು. ಭಾರಿ ಶಸ್ತಾಸ್ತ್ರ ಹೊತ್ತ ಹಲವು ಉಗ್ರರು ಭಟ್ಟಲ್ ಪ್ರದೇಶದ ಅರಣ್ಯದಿಂದ ಒಳನುಸಳಲು ಯತ್ನಿಸುತ್ತಿದ್ದರು. ಕೂಡಲೇ ಕಾರ್ಯಪೃವೃತ್ತರಾದ ಸೇನಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.
ಈ ವೇಳೆ ಉಗ್ರರು ಸೇನಾಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಉಗ್ರರ ದಾಳಿಗೆ ಸೇನಾಪಡೆ ಪ್ರತಿದಾಳಿ ನಡೆಸಿದ್ದರು. ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. ಹುತಾತ್ಮ ಸೇನಾಧಿಕಾರಿಯನ್ನು ಕುಲದೀಪ್ ಚಂದ್ ಎಂದು ಗುರ್ತಿಸಲಾಗಿದೆ.
ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಕಳೆದ ಒಂದು ವರ್ಷದಿಂದ ಚೆನಾಬ್ ಕಣಿವೆ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಜೈಷ್-ಇ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಸೈಫುಲ್ಲಾ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಕೆಟ್ಟ ಮತ್ತು ಪ್ರತಿಕೂಲ ಹವಾಮಾನದ ಹೊರತಾಗಿಯೂ, ಕಿಶ್ತ್ವಾರ್ನ ಛಾತ್ರುನಲ್ಲಿ ಪಾಕಿಸ್ತಾನದ ಇಬ್ಬರನ್ನು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿವೆ.
ಹತ್ಯೆಯಾದ ಉಗ್ರರಿಂದ ಒಂದು ಎಕೆ ಮತ್ತು ಒಂದು ಎಂ4 ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆಯ ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದೆ.
ಕಳೆದ ಬುಧವಾರದಿಂದ ಸೇನಾಪಡೆ ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಉಗ್ರರ ಚಲನವಲನಗಳು ಪತ್ತೆಯಾಗಿತ್ತು. ಈ ವೇಳೆ ಕಾರ್ಯಾಚರಣೆ ತೀವ್ರಗೊಂಡಾಗ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ಆರಂಭಿಸಿದ್ದಾರೆ. ಬಳಿಕ ಸ್ಥಳವನ್ನು ಸುತ್ತುವರೆದ ಸೇನಾಪಡೆ ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ತಿಂಗಳು ಜಮ್ಮು ಪ್ರದೇಶದ ಕಥುವಾ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಮತ್ತು ಇಬ್ಬರು ಉಗ್ರರು ಸಾವನ್ನಪ್ಪಿದ ನಂತರ ಅಖ್ನೂರ್, ಕಿಶ್ತ್ವಾರ್ ಮತ್ತು ಉಧಂಪುರದಲ್ಲಿ ಸೇನಾಪಡೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ ಎಂದು ತಿಳಿದುಬಂದಿದೆ.
ಸೇನಾಪೆ ಶೋಧ ಕಾರ್ಯಾಚರಣೆಗೆ ಪರ್ವತ ಪ್ರದೇಶ ಮತ್ತು ಹಿಮದಿಂದ ಆವೃತವಾದ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವಲನಗಳನ್ನು ಪತ್ತೆಹಚ್ಚಲು ಡ್ರೋನ್ಗಳು, ಹೆಲಿಕಾಪ್ಟರ್ಗಳು ಮತ್ತು ಸ್ನಿಫರ್ ನಾಯಿಗಳನ್ನು ಬಳಸುತ್ತಿದ್ದಾರೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಯಾಚರಣೆಗೆ ಉನ್ನತ ಪ್ಯಾರಾ ಕಮಾಂಡೋಗಳು ಸೇನಾಪಡೆಗೆ ಸಹಾಯ ಮಾಡುತ್ತಿದ್ದಾರೆ. ಜಮ್ಮುವಿನ ಉಧಂಪುರ ಜಿಲ್ಲೆಯ ಜೋಫರ್-ಮಾರ್ಟಾ ಅರಣ್ಯ ಪ್ರದೇಶದಲ್ಲಿ ಮತ್ತೊಂದು ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
Advertisement