ಪಶ್ಚಿಮ ಬಂಗಾಳ: ವಕ್ಫ್‌ ಪ್ರತಿಭಟನೆ ವೇಳೆ ಹಿಂಸಾಚಾರ; ಅಂಗಡಿ-ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ; 110 ಮಂದಿ ಬಂಧನ; Video

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
murshidabad violence
ಮುರ್ಷಿದಾಬಾದ್ ನಲ್ಲಿ ನಡೆದ ಹಿಂಸಾಚಾರ
Updated on

ಕೊಲ್ಕೋತಾ: ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 110 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ಹಿಂಸಾತ್ಮಕತೆಗೆ ತಿರುಗಿದೆ. ಕಳೆದ ದಿನ (ಏಪ್ರಿಲ್ 11, 2025) ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಹಿಂಸಾಚಾರ ಮೆರೆದಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ಸಂಜೆ ಬಳಿಕ ನಡೆದ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕನಿಷ್ಠ ಎರಡು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸುತಿ ಮತ್ತು ಶಂಶೇರ್‌ಗಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ಉಗ್ರ ಸ್ವರೋಪ ಪಡೆದುಕೊಂಡಿತ್ತು. ಪೊಲೀಸರು ಪ್ರತಿಭಟನಾಕಾರರನ್ನು ಎಷ್ಟೇ ಪ್ರಯತ್ನಪಟ್ಟರೂ ಕೂಡ ಹತ್ತಿಕ್ಕಲು ಸಾಧ್ಯವಾಗದೇ ವಾತಾವರಣವೇ ಬಿಗುವಾಗಿತ್ತು.

ಈ ಸಂದರ್ಭದಲ್ಲಿ ಆಕ್ರೋಶಗೊಂಡ ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಬಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ ವಾಹನ ಹಾಗೂ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದು ಕಂಡು ಬಂದಿದೆ. ಈ ಸಂದರ್ಭದಲ್ಲಿ ಸುಮಾರು 10 ಪೊಲೀಸರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುತಿಯಿಂದ ಸುಮಾರು 70 ಜನರನ್ನು ಮತ್ತು ಸಂಸರ್‌ಗಂಜ್‌ನಿಂದ 41 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಿಂಸಾಚಾರ ಪೀಡಿತ ಈ ಸ್ಥಳಗಳಲ್ಲಿ ಶನಿವಾರ ಬೆಳಿಗ್ಗೆ ಪರಿಸ್ಥಿತಿ ಉದ್ವಿಗ್ನವಾಗಿತ್ತು, ಆದರೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚು ಹಾನಿಗೊಳಗಾದ ಮುರ್ಷಿದಾಬಾದ್ ಜಿಲ್ಲೆಯಲ್ಲಿ, ಹಿಂಸಾಚಾರ ನಡೆದ ಸ್ಥಳಗಳಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದರು.

ಸುತಿ ಮತ್ತು ಸಂಸೇರ್‌ಗಂಜ್ ಪ್ರದೇಶಗಳಲ್ಲಿ ಪೊಲೀಸ್ ವಾಹನ ಗಸ್ತು ತಿರುಗುತ್ತಿದೆ. ಯಾರೂ ಎಲ್ಲಿಯೂ ಮತ್ತೆ ಗುಂಪುಗೂಡಲು ಅವಕಾಶವಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಯಾವುದೇ ಪ್ರಯತ್ನವನ್ನು ನಾವು ಅವಕಾಶ ನೀಡುವುದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿನ ವದಂತಿಗಳಿಗೆ" ಜನರು ಗಮನ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಏತನ್ಮಧ್ಯೆ, ಸುತಿಯಲ್ಲಿ ನಡೆದ ಘರ್ಷಣೆಯ ಸಮಯದಲ್ಲಿ ಪೊಲೀಸ್ ಗುಂಡು ಹಾರಿಸಿದ್ದರಿಂದ ಗಾಯಗೊಂಡಿದ್ದ ಹದಿಹರೆಯದ ಬಾಲಕನನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯದ ಜನ ಹೆಚ್ಚಿರುವ ಪ್ರದೇಶದಲ್ಲಿ ಹಿಂಸಾಚಾರ ನಡೆದಿದೆ. ಮಮತಾ ಬ್ಯಾನರ್ಜಿ ಸರ್ಕಾರವು ಪರಿಸ್ಥಿತಿ ನಿಭಾಯಿಸಲು "ಅಸಮರ್ಥ"ವಾಗಿದ್ದರೆ, ಕೇಂದ್ರದಿಂದ ಸಹಾಯ ಪಡೆಯಬೇಕು ಎಂದು ಬಿಜೆಪಿ ಹೇಳಿದೆ. ಈ ಸಂಬಂಧ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, "ಇದು ಪ್ರತಿಭಟನೆಯ ಕೃತ್ಯವಲ್ಲ, ಬದಲಾಗಿ ಪೂರ್ವಯೋಜಿತ ಹಿಂಸಾಚಾರ, ನಮ್ಮ ಸಮಾಜದ ಇತರ ಸಮುದಾಯಗಳಲ್ಲಿ ತ ಭಯ ಮೂಡಿಸಲು ಹಾಗೂ ಅವ್ಯವಸ್ಥೆ ಹರಡಲು ಪ್ರಯತ್ನಿಸುತ್ತಿರುವ ಜಿಹಾದಿ ಶಕ್ತಿಗಳಿಂದ ಪ್ರಜಾಪ್ರಭುತ್ವ ಮತ್ತು ಆಡಳಿತದ ಮೇಲೆ ನಡೆದ ದಾಳಿ ಎಂದು ಆರೋಪಿಸಿದ್ದಾರೆ. .

ಇನ್ನೂ ಹಿಂಸಾಚಾರದ ವೇಳೆ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಭಯದ ವಾತಾವರಣವನ್ನು ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ. ಹಿಂಸಾಚಾರದ ಹಿಂದಿರುವವರನ್ನು ಗುರುತಿಸಬೇಕು, ಬಂಧಿಸಬೇಕು ಮತ್ತು ಕಾನೂನಿನ ಕಠಿಣ ವಿಭಾಗಗಳ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ಸುವೇಂದು ಅಧಿಕಾರಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com