
ನವದೆಹಲಿ: ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಶೀಘ್ರದಲ್ಲೇ ಪುನರಾರಂಭಿಸುವ ಸಾಧ್ಯತೆ ಇದೆ ಮತ್ತು ಅದರ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗುವುದು ಎಂದು ಗುರುವಾರ ಕೇಂದ್ರ ಸರ್ಕಾರ ಹೇಳಿದೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಸಹಿ ಹಾಕಲಾದ ಒಪ್ಪಂದದ ಚೌಕಟ್ಟಿನಡಿಯಲ್ಲಿ ಸಂಬಂಧಗಳನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.
"ಕೈಲಾಸ ಮಾನಸ ಸರೋವರ ಯಾತ್ರೆಯ ಕುರಿತು ನಾವು ಶೀಘ್ರದಲ್ಲೇ ಸಾರ್ವಜನಿಕ ಪ್ರಕಟಣೆ ಹೊರಡಿಸುತ್ತೇವೆ ಮತ್ತು ಶೀಘ್ರದಲ್ಲೇ ಯಾತ್ರೆಯನ್ನು ಪುನರಾರಂಭಿಸುವ ಸಾಧ್ಯತೆಯಿದೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹೇಳಿದ್ದಾರೆ.
"ಈ ವರ್ಷ ಯಾತ್ರೆ ನಡೆಯಲಿದೆ ಮತ್ತು ನಾವು ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಸಾರ್ವಜನಿಕರಿಗೆ ತಿಳಿಸುತ್ತೇವೆ" ಎಂದು ಅವರು ಹೇಳಿದ್ದಾರೆ.
2020ರ ಕೋವಿಡ್ ಬಳಿಕ ಟಿಬೆಟ್ನ ಕೈಲಾಸ ಪರ್ವತ ಮತ್ತು ಮಾನಸ ಸರೋವರಕ್ಕೆ ಭೇಟಿ ನೀಡುವ ಈ ಯಾತ್ರೆಯನ್ನು ಏಕಾಏಕಿ ಸ್ಥಗಿತಗೊಳಿಸಲಾಗಿತ್ತು. ಅಲ್ಲದೇ ಗಲ್ವಾನ್ ಘರ್ಷಣೆಯ ಬಳಿಕ ಬೀಜಿಂಗ್ ಮತ್ತು ನವದೆಹಲಿ ನಡುವಿನ ಮುನಿಸು ಮತ್ತೆ ಮುಂದುವರಿದಿತ್ತು. ಇದೀಗ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಲು ಭಾರತ ಹಾಗೂ ಚೀನಾ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ನಿರ್ಧರಿಸಿವೆ.
Advertisement