
ನವದೆಹಲಿ: ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ ಭವನವನ್ನು ಮುಚ್ಚಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಶನಿವಾರ ಹೇಳಿದ್ದಾರೆ.
ಈ ಕುರಿತು X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ದುಬೆ, ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ ಭವನವನ್ನು ಮುಚ್ಚಬೇಕು ಎಂದು ಹೇಳಿದ್ದಾರೆ.
ಇನ್ನು ದುಬೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮಾಣಿಕಮ್ ಟ್ಯಾಗೋರ್, "ಇದು ಸುಪ್ರೀಂ ಕೋರ್ಟ್ ವಿರುದ್ಧದ ಮಾನಹಾನಿ ಹೇಳಿಕೆಯಾಗಿದೆ. ನಿಶಿಕಾಂತ್ ದುಬೆ ಇತರ ಎಲ್ಲ ಸಂಸ್ಥೆಗಳನ್ನು ನಿರಂತರವಾಗಿ ಕೆಡವುವ ವ್ಯಕ್ತಿ. ಈಗ, ಅವರು ಸುಪ್ರೀಂ ಕೋರ್ಟ್ ಮೇಲೆ ದಾಳಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಇದನ್ನು ಗಮನಕ್ಕೆ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಅವರು ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಸಂಸತ್ತಿನ ಹೊರಗೆ ಮಾತನಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಮೇಲಿನ ಅವರ ದಾಳಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದಿದ್ದಾರೆ.
ಈ ತಿಂಗಳ ಮೊದಲ ವಾರದಲ್ಲಿ ಸಂಸತ್ತು ಅಂಗೀಕರಿಸಿದ ವಕ್ಫ್(ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಜಾರ್ಖಂಡ್ ನ ಗೊಡ್ಡಾ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಈ ಹೇಳಿಕೆ ಹೊರಬಿದ್ದಿದೆ.
ರಾಷ್ಟ್ರಪತಿಗಳು ಅಥವಾ ರಾಜ್ಯಪಾಲರು ತಮಗೆ ಕಳುಹಿಸಲಾದ ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಇತ್ತೀಚಿಗೆ ಕಾಲಮಿತಿ ನಿಗದಿಪಡಿಸಿದ್ದು, ಇದಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತೀರ್ಪಿನ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
Advertisement