
ಪಾಟ್ನಾ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರಕ್ಕೆ ಭೇಟಿ ನೀಡುತ್ತಿರುವುದರಿಂದ, ಬಿಹಾರ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಪಹಲ್ಗಾಮ್ ದಾಳಿಯ ನಂತರ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿರುವುದರಿಂದ, ರಾಜ್ಯ ಸರ್ಕಾರ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸುತ್ತಿದೆ.
ಪ್ರಧಾನಿಯವರಿಗಾಗಿ ಆಯೋಜಿಸಲಾದ ಕಾರ್ಯಕ್ರಮಗಳಲ್ಲಿ ಪಾಟ್ನಾದಲ್ಲಿ ನಡೆಯುವ ಸಮಾರಂಭವೂ ಸೇರಿದೆ. ಈ ಸಂದರ್ಭದಲ್ಲಿ ಅವರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುತ್ತಾರೆ ಮತ್ತು ಹೊಸ ರೈಲುಗಳಿಗೆ ಚಾಲನೆ ನೀಡುತ್ತಾರೆ. ನಂತರ, ಪಂಚಾಯತ್ ರಾಜ್ ದಿವಸ್ ಸಂದರ್ಭದಲ್ಲಿ ಮಧುಬನಿ ಜಿಲ್ಲೆಯ ಝಂಝರ್ಪುರದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಹಾರ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ವಿನಯ್ ಕುಮಾರ್ ಅವರು ಬುಧವಾರ ತಿಳಿಸಿದ್ದಾರೆ.
ಭಾರತ-ನೇಪಾಳ ಗಡಿಯಲ್ಲಿರುವ ಜಿಲ್ಲೆಗಳು, ವಿಮಾನ ನಿಲ್ದಾಣಗಳು ಮತ್ತು ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಡಿಜಿಪಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯ ನಂತರ ಅವರು ಹೇಳಿದ್ದಾರೆ.
ಜಿಲ್ಲಾ ಪೊಲೀಸರಲ್ಲದೆ, ರಾಜ್ಯ ಪೊಲೀಸ್ ಗುಪ್ತಚರ ವಿಭಾಗದ ಅಧಿಕಾರಿಗಳಿಗೆ, ನೇಪಾಳದಿಂದ ಭಾರತಕ್ಕೆ ಬರುವ ಜನರ ಚಲನವಲನಗಳ ಮೇಲೆ ತೀವ್ರ ನಿಗಾ ಇಡಲು ಸೂಚಿಸಲಾಗಿದೆ. ಭಾರತ-ನೇಪಾಳ ಗಡಿಯಲ್ಲಿರುವ ಗಡಿ ಪೊಲೀಸ್ ಹೊರಠಾಣೆಗಳನ್ನು(ಬಿಒಪಿ) ಗರಿಷ್ಠ ಜಾಗರೂಕತೆಯಿಂದ ಇರಿಸಲಾಗಿದೆ ಮತ್ತು ಗಡಿಯಾಚೆಗಿನ ಚಟುವಟಿಕೆಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಮಧುಬನಿ ನೇಪಾಳದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ ಮತ್ತು ಭಯೋತ್ಪಾದಕರು ನೇಪಾಳದಿಂದ ಭಾರತದ ಒಳಗೆ ನುಸುಳಬಹುದು ಎಂದು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಮೂಲಗಳು ತಿಳಿಸಿವೆ.
Advertisement