
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇಂದು ಉನ್ನತಮಟ್ಟದ ಸಂಪುಟ ಸಮಿತಿ ಸಭೆ ನಡೆಸಿದ ಕೇಂದ್ರ ಸರ್ಕಾರ ಗುರುವಾರ ಸರ್ವಪಕ್ಷಗಳ ಸಭೆ ಕರೆದಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ಅವರೂ ಉಪಸ್ಥಿತರಿರಲಿದ್ದಾರೆ. ಪಹಲ್ಗಾಮ್ ದಾಳಿಯ ಕುರಿತು ಸರ್ವಪಕ್ಷ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಇಂದಿನ ಸಭೆಯಲ್ಲಿ ಪಾಕ್ ಉಗ್ರರನ್ನು ಮಟ್ಟಹಾಕಲು, ಪಾಕ್ ಸಂಬಂಧ ಕಡಿದುಕೊಳ್ಳುವ ಬಗ್ಗೆ ತೆಗೆದುಕೊಂಡ ನಿರ್ಧಾರಗಳನ್ನು ವಿವರಿಸಲಿದ್ದಾರೆ.
ಸಭೆಯಲ್ಲಿ, ರಾಜನಾಥ್ ಸಿಂಗ್ ಮತ್ತು ಇತರ ಸರ್ಕಾರಿ ಅಧಿಕಾರಿಗಳು ಭಯೋತ್ಪಾದಕ ದಾಳಿ, ನಂತರ ಸಂಗ್ರಹಿಸಿದ ಪುರಾವೆಗಳು ಮತ್ತು ಘಟನೆಯ ನಂತರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ನಾಯಕರಿಗೆ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಗ್ರರ ದಾಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ತಕ್ಷಣ ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯುವುದರ ಜತೆಗೆ ಭಯೋತ್ಪಾದಕರನ್ನು ಹುಡುಕಿ ಹೊಡೆದು ಹಾಕಬೇಕು’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
Advertisement