
ನವದೆಹಲಿ: ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ವಾತಾವರಣ ಸೃಷ್ಟಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ. ಆದರೆ ಸಾರ್ವಜನಿಕರು ರಾಷ್ಟ್ರ ರಾಜಧಾನಿಯನ್ನು ಆಳುವ ಜನಾದೇಶ ನೀಡಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಬೇಸರ ವ್ಯಕ್ತಪಡಿಸಿದ್ದಾರೆ.
ಜನಾದೇಶವನ್ನು ಒಪ್ಪಿಕೊಂಡ ಖರ್ಗೆ, ದೆಹಲಿಯಲ್ಲಿ ಮಾಲಿನ್ಯ, ಯಮುನಾ ಸ್ವಚ್ಛತೆ, ವಿದ್ಯುತ್, ರಸ್ತೆಗಳು, ನೀರು ಮತ್ತು ಅಭಿವೃದ್ಧಿಯ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಮತ್ತು ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಹೇಳಿದರು.
"ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾಂಗ್ರೆಸ್, ಆಡಳಿತ ವಿರೋಧಿ ಅಲೆ ಸೃಷ್ಟಿಸಿತು. ಆದರೆ ನಾವು ನಿರೀಕ್ಷಿಸಿದಂತೆ ಸಾರ್ವಜನಿಕರು ನಮಗೆ ಜನಾದೇಶ ನೀಡಲಿಲ್ಲ. ನಾವು ಸಾರ್ವಜನಿಕ ಅಭಿಪ್ರಾಯವನ್ನು ಸ್ವೀಕರಿಸುತ್ತೇವೆ" ಎಂದು ಅವರು ಖರ್ಗೆ X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
"ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಕೂಲ ಸಂದರ್ಭಗಳಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಆದರೆ ಇನ್ನೂ ಹೆಚ್ಚಿನ ಶ್ರಮ ಮತ್ತು ಹೋರಾಟದ ಅಗತ್ಯವಿದೆ" ಎಂದು ಅವರು ಹೇಳಿದರು.
ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಸತತ ಮೂರನೇ ಬಾರಿ ಶೂನ್ಯ ಸಂಪಾದಿಸಿದೆ. 70 ಸದಸ್ಯ ಬಲದ ವಿಧಾನಸಭೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಖಾತೆ ತೆರೆಯಲು ವಿಫಲವಾಯಿತು ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಹೀನಾಯ ಸೋಲು ಅನುಭವಿಸಿದೆ.
Advertisement