
ಅಹಮದಾಬಾದ್: ಗುಜರಾತ್ನ ಸುರೇಂದ್ರನಗರ ಜಿಲ್ಲೆಯ ಪಟ್ಡಿ ತಾಲ್ಲೂಕಿನಲ್ಲಿ ಮಂಗಳವಾರ ಮ್ಯಾನ್ಹೋಲ್ ಸ್ವಚ್ಛಗೊಳಿಸುವಾಗ ದಲಿತ ಸಮುದಾಯದ ಇಬ್ಬರು ಪೌರ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಮತ್ತು ಘಟನೆ ಕುರಿತು ತನಿಖೆ ನಡೆಯುತ್ತಿದೆ. ಈ ಸಂಬಂಧ ಪುರಸಭೆಯ ಮುಖ್ಯ ಅಧಿಕಾರಿ ಸೇರಿದಂತೆ ಮೂವರ ವಿರುದ್ಧ ನರಹತ್ಯೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಏತನ್ಮಧ್ಯೆ, ಮೃತರ ಕುಟುಂಬಗಳಿಗೆ ತಲಾ 30 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಪೊಲೀಸ್ ವರದಿಗಳ ಪ್ರಕಾರ, ಮೃತ ಕಾರ್ಮಿಕರನ್ನು ಚಿರಾಗ್ ಕನು ಪಟಾಡಿಯಾ(18) ಮತ್ತು ಜಯೇಶ್ ಭರತ್ ಪಟಾಡಿಯಾ(28) ಎಂದು ಗುರುತಿಸಲಾಗಿದೆ. ಈ ಇಬ್ಬರು ಯಾವುದೇ ಸುರಕ್ಷತಾ ಸಾಧನಗಳನ್ನು ಬಳಸದೇ 15 ರಿಂದ 20 ಮೀಟರ್ ಆಳದ ಮ್ಯಾನ್ಹೋಲ್ಗೆ ಇಳಿದಿದ್ದು ದುರಂತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ, ಪಟ್ಟಿ ನಗರ ಪಾಲಿಕೆಯ ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ, ಚಿರಾಗ್, ಜಯೇಶ್ ಮತ್ತು ಸಹೋದ್ಯೋಗಿ ಚೇತನ್ ಮಂಗಾ ಪಟಡಿಯಾ ಅವರನ್ನು ಪಟ್ಟಿಯಲ್ಲಿರುವ ಡಿವೋಷನ್ ಸ್ಕೂಲ್ ಬಳಿಯ ಒಳಚರಂಡಿ ಮಾರ್ಗವನ್ನು ಸ್ವಚ್ಛಗೊಳಿಸಲು ನಿಯೋಜಿಸಲಾಗಿತ್ತು.
ಬೆಳಗ್ಗೆ 11:30 ರ ಹೊತ್ತಿಗೆ, ಮ್ಯಾನ್ಹೋಲ್ ಒಳಗೆ ಕೆಲಸ ಮಾಡುತ್ತಿದ್ದಾಗ, ಚಿರಾಗ್ ಮತ್ತು ಜಯೇಶ್, ಚರಂಡಿಯಲ್ಲಿ ವಿಷಕಾರಿ ಅನಿಲ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಈ ಹೊರಗಿದ್ದ ಚೇತನ್ ಅವರನ್ನು ರಕ್ಷಿಸಲು ಪ್ರಯತ್ನಿಸಿದರು. ಆದರೆ ವಿಷಕಾರಿ ಅನಿಲ ಅವರ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಪೊಲೀಸರು ಇಬ್ಬರನ್ನು ಮ್ಯಾನ್ಹೋಲ್ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
Advertisement