ಸಂವಿಧಾನ ಬದಲಾದ ದಿನ ದೇಶದಲ್ಲಿ ಹಿಂದುಳಿದವರು, ದಲಿತರು, ಆದಿವಾಸಿಗಳಿಗೆ ಏನೂ ಉಳಿಯಲ್ಲ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ನಡೆಸಲಿದೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ಮಹು (ಮಧ್ಯ ಪ್ರದೇಶ): ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಿಆರ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಅವಮಾನಿಸುತ್ತಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದು, ಸಂವಿಧಾನವನ್ನು ಅಧಿಕಾರದಲ್ಲಿರುವವರಿಂದ ರಕ್ಷಿಸಬೇಕೆಂದು ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದ್ದಾರೆ.

ಇಲ್ಲಿ ನಡೆದ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್ ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ನಡೆಸಲಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಎಂದಿಗೂ ಮಾಡುವುದಿಲ್ಲ. ಏಕೆಂದರೆ ಅವರು ಅದರಿಂದ ಉಂಟಾಗಬಹುದಾದ ಪರಿಣಾಮಗಳು ಅಥವಾ ರಾಜಕೀಯ ಪತನದ ಬಗ್ಗೆ ಹೆದರುತ್ತಾರೆ ಎಂದು ಆರೋಪಿಸಿದರು.

ಸದ್ಯದ ಮೀಸಲಾತಿ ಮಿತಿಯ ಗೋಡೆಯನ್ನು ಒಡೆದು ಕಾಂಗ್ರೆಸ್ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಶೇ 50ರಷ್ಟು ಮೀಸಲಾತಿ ಒದಗಿಸಲು ಮುಂದಾಗುತ್ತದೆ ಮತ್ತು ಈ ಸಂಬಂಧ ಕಾನೂನು ಜಾರಿಗೆ ತರಲಿದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರವು ಕೋಟ್ಯಾಧಿಪತಿಗಳಿಗಾಗಿ ಕೆಲಸ ಮಾಡುತ್ತಿದೆ. ಉದ್ಯೋಗಾವಕಾಶಗಳನ್ನು ಕಸಿದುಕೊಂಡು ದೇಶದ ಸಂಪತ್ತನ್ನು ಕೆಲವೇ ಕೆಲವು ಬಂಡವಾಳಶಾಹಿಗಳಿಗೆ ಹಸ್ತಾಂತರಿಸುವ ಮೂಲಕ ದಲಿತರು, ಹಿಂದುಳಿದವರು, ಆದಿವಾಸಿಗಳು ಮತ್ತು ಬಡವರನ್ನು ಮತ್ತೊಮ್ಮೆ ಗುಲಾಮರನ್ನಾಗಿ ಮಾಡಲಾಗುತ್ತಿದೆ ಎಂದು ದೂರಿದರು.

ರಾಹುಲ್ ಗಾಂಧಿ
ನಮ್ಮ ಸಂವಿಧಾನ ಜೀವಂತ ದಾಖಲೆಯಾಗಿದೆ: ದೇಶ ಉದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ

ಸ್ವಾತಂತ್ರ್ಯ ಪೂರ್ವದಲ್ಲಿದ್ದ ರೀತಿಯಲ್ಲಿ ಬಡವರಿಗೆ ಯಾವುದೇ ಹಕ್ಕುಗಳು ಇಲ್ಲದ ಹಾಗೆ ಮತ್ತು ಶ್ರೀಮಂತರಿಗೆ ಮಾತ್ರ ಎಲ್ಲ ರೀತಿಯ ಹಕ್ಕುಗಳು ಇರುವಂತಹ ಪರಿಸ್ಥಿತಿಯನ್ನು ತರಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಯಸುತ್ತವೆ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಬದಲಾಯಿಸಲು ಬಿಜೆಪಿ-ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ ಮತ್ತು ಅದಕ್ಕಾಗಿಯೇ ಅವರು ಕಳೆದ ವರ್ಷದ ಲೋಕಸಭೆ ಚುನಾವಣೆಯಲ್ಲಿ '400 ಪಾರ್' ಎಂಬ ಘೋಷಣೆ ಮೊಳಗಿಸಿದರು. ನಮ್ಮ ಸಂವಿಧಾನ ಬದಲಾದ ದಿನ ದೇಶದಲ್ಲಿ ಹಿಂದುಳಿದವರು, ದಲಿತರು, ಆದಿವಾಸಿಗಳಿಗೆ ಏನೂ ಉಳಿಯುವುದಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com