
ಮುಂಬೈ: ವಾಣಿಜ್ಯ ನಗರಿಯಲ್ಲಿನ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿನ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದ್ದು, ಮುಂಬೈ ಈಗ ಧ್ವನಿವರ್ಧಕ ಇಲ್ಲದ ನಗರವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದೇವನ್ ಭಾರ್ತಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಆಯ್ದ ಧಾರ್ಮಿಕ ಕೇಂದ್ರಗಳ ಧ್ವನಿವರ್ಧಕಗಳನ್ನು ಮಾತ್ರ ತೆರವುಗೊಳಿಸಲಾಗಿದೆ ಎಂಬ ಹೇಳಿಕೆಗಳನ್ನು ನಿರಾಕರಿಸಿದ ಅವರು, ನಿರ್ದಿಷ್ಟ ಸಮುದಾಯವನ್ನು ಪ್ರತ್ಯೇಕಿಸಲಾಗಿಲ್ಲ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಿರ್ದೇಶನಕ್ಕೆ ಅನುಗುಣವಾಗಿ ಕ್ರಮಬದ್ಧವಾಗಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಧ್ವನಿವರ್ಧಕ ತೆರವು ಕಾರ್ಯಾಚರಣೆ ಕೈಗೊಳ್ಳುವ ಮುನ್ನಾ ಸಮುದಾಯ, ಧಾರ್ಮಿಕ ಮುಖಂಡರು ಮತ್ತು ರಾಜಕೀಯ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಸ್ಪಷ್ಪಪಡಿಸಿದ್ದಾರೆ.
ಶಬ್ದ ಮಾಲಿನ್ಯದ ನಿಯಮಗಳು ಮತ್ತು ನಿಯಮಗಳನ್ನು ಉಲ್ಲಂಘಿಸುವ ಧ್ವನಿವರ್ಧಕಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಈ ವರ್ಷದ ಜನವರಿಯಲ್ಲಿ ಬಾಂಬೆ ಹೈಕೋರ್ಟ್ ಪೊಲೀಸರಿಗೆ ಸೂಚಿಸಿತ್ತು. ಧ್ವನಿವರ್ಧಕಗಳ ಬಳಕೆಯನ್ನು ಯಾವುದೇ ಧರ್ಮದ ಅವಿಭಾಜ್ಯ ಅಂಗವೆಂದು ಪರಿಗಣಿಸುವುದಿಲ್ಲ ಎಂದು ಹೈಕೋರ್ಟ್ ಪುನರುಚ್ಚರಿಸಿತ್ತು. ಈ ಆದೇಶಕ್ಕನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ನಗರದಾದ್ಯಂತ ಧಾರ್ಮಿಕ ಕೇಂದ್ರಗಳಿಂದ ಸುಮಾರು 1,500 ದಿಕ್ಕಿನ ಧ್ವನಿವರ್ಧಕಗಳನ್ನು ತೆಗೆದುಹಾಕಿದ್ದೇವೆ. ಅಂತಹ ಧ್ವನಿವರ್ಧಕಗಳನ್ನು ಮತ್ತೆ ಹಾಕದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದೀಗ ಶಾಶ್ವತ ಧ್ವನಿವರ್ಧಕಗಳ ನಿಷೇಧ ಜಾರಿಯಲ್ಲಿದ್ದು, ಹಬ್ಬಗಳ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆಗೆ ತಾತ್ಕಾಲಿಕ ಅನುಮತಿ ನೀಡಲಾಗುವುದು ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
Advertisement