
ಚೆನ್ನೈ: ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ನಿರ್ಧರಿಸಲು ಜನಸಂಖ್ಯೆ ಮಾತ್ರ ಮಾನದಂಡವಾಗಿರಬಾರದು ಎಂದು ಬಿಜು ಜನತಾದಳದ ಅಧ್ಯಕ್ಷ, ಒಡಿಶಾ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಶನಿವಾರ ಹೇಳಿದ್ದಾರೆ.
ಇಂದು ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕರೆದಿದ್ದ ಕ್ಷೇತ್ರ ಪುನರ್ ವಿಂಗಡಣೆ ಕುರಿತ ಮೊದಲ ಜಂಟಿ ಕ್ರಿಯಾ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಡಿಶಾದ ಜನರ ಹಿತಾಸಕ್ತಿಗಳನ್ನು ರಕ್ಷಿಸಲು ಬಿಜೆಡಿ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತದೆ ಎಂದು ಹೇಳಿದರು.
ನಮ್ಮ ಸಂಸತ್ತಿನಲ್ಲಿ ಸ್ಥಾನಗಳ ಸಂಖ್ಯೆಯನ್ನು ನಿರ್ಧರಿಸಲು ಜನಸಂಖ್ಯೆ ಮಾತ್ರ ಮಾನದಂಡವಾಗಿರಬಾರದು ಎಂಬುದು ನಮ್ಮ ನಿಲುವು. ಈ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಪ್ರಾರಂಭವಾಗುವ ಮೊದಲು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ವಿವರವಾದ ಚರ್ಚೆ ನಡೆಸಬೇಕು ಎಂದು ಕೇಂದ್ರಕ್ಕೆ ಆಗ್ರಹಿಸಿದರು.
"ನಮ್ಮ ಪ್ರಜಾಪ್ರಭುತ್ವದ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುವ ಈ ಪ್ರಮುಖ ವಿಷಯದ ಬಗ್ಗೆ ಇರುವ ಎಲ್ಲಾ ಸಂದೇಹಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಎಲ್ಲಾ ಪಕ್ಷಗಳೊಂದಿಗೆ ವಿವರವಾದ ಚರ್ಚೆಯನ್ನು ಕೈಗೊಳ್ಳಬೇಕು ಎಂದು ನಾನು ಒತ್ತಾಯಿಸುತ್ತೇನೆ" ಎಂದು ಪಟ್ನಾಯಕ್ ಹೇಳಿದರು.
ಸಭೆಯಲ್ಲಿ ಭಾಗವಹಿಸಲು ಬಿಜೆಡಿ ತನ್ನ ಇಬ್ಬರು ನಾಯಕರನ್ನು ಚೆನ್ನೈಗೆ ಕಳುಹಿಸಿದೆ, ಆದರೆ ಪಟ್ನಾಯಕ್ ವರ್ಚುವಲ್ ಆಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
"ಜನಸಂಖ್ಯೆಯನ್ನು ನಿಯಂತ್ರಿಸಲು ಮತ್ತು ಸ್ಥಿರಗೊಳಿಸಲು ಉತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯಗಳಲ್ಲಿ ವಾಸಿಸುವ ಜನರ ಪ್ರಜಾಸತ್ತಾತ್ಮಕ ಪ್ರಾತಿನಿಧ್ಯ ಮತ್ತು ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ಇದು ಒಂದು ಪ್ರಮುಖ ಸಭೆಯಾಗಿದೆ" ಎಂದು ಒಡಿಶಾ ಮಾಜಿ ಮುಖ್ಯಮಂತ್ರಿ ಪಟ್ನಾಯಕ್ ಹೇಳಿದರು.
Advertisement