
ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವುದಾಗಿ ಆಡಳಿತಾರೂಢ ಬಿಜೆಪಿ ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಪ್ರಸ್ತಾಪಿಸಿದ್ದರಿಂದ ಗದ್ದಲ, ಕೋಲಾಹಲ ಉಂಟಾಯಿತು. ಲೋಕಸಭೆಯನ್ನು ಪದೇ ಪದೇ ಮುಂದೂಡಲಾಯಿತು.
ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಿದರು. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ವಿಷಯ ಕುರಿತ ಗಮನ ಸೆಳೆಯಲು ಸಮಾಜವಾದಿ ಪಕ್ಷದ ಸದಸ್ಯರು ಫೋಸ್ಟರ್ ಪ್ರದರ್ಶಿಸುತ್ತಾ ಸ್ಪೀಕರ್ ಪೀಠದತ್ತ ಧಾವಿಸಿದರು.
ಎಸ್ ಪಿ ಸದಸ್ಯರು ಸದನದಲ್ಲಿ ಫೋಸ್ಟರ್ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಓಂ ಬಿರ್ಲಾ, 12 ಗಂಟೆಗೆ ಕಲಾಪವನ್ನು ಮುಂದೂಡಿದರು.
ಸದನ ಮತ್ತೆ ಸಮಾವೇಶಗೊಂಡಾಗ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಒದಗಿಸಲು ಅನುಕೂಲವಾಗುವಂತೆ ಸಂವಿಧಾನವನ್ನು ಬದಲಾಯಿಸುವುದಾಗಿ ಸಾಂವಿಧಾನಿಕ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ನೀಡಿರುವ ಹೇಳಿಕೆಯನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದರು.
ಆ ವ್ಯಕ್ತಿಯನ್ನು ವಜಾಗೊಳಿಸುವ ಬಗ್ಗೆ ಕಾಂಗ್ರೆಸ್ ಸ್ಪಷ್ಪಪಡಿಸಬೇಕು ಎಂದು ಒತ್ತಾಯಿಸಿದ ರಿಜಿಜು, ಮುಸ್ಲಿಮರಿಗೆ ಮೀಸಲಾತಿ ನೀಡುವುದಾಗಿ ಹೇಳುವ ನೀವು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನದ ಪ್ರತಿಯನ್ನು ಜೀಬಿನಲ್ಲಿಟ್ಟುಕೊಂಡು ನಾಟಕವಾಡುತ್ತೀರಿ ಎಂದು ರಿಜಿಜು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕೆಲವು ಕಾಂಗ್ರೆಸ್ ಸದಸ್ಯರು ರಿಜಿಜು ವಿರುದ್ಧ ಮುಗಿ ಬಿದ್ದಾಗ ಸದನದಲ್ಲಿ ಗದ್ದಲ ಉಂಟಾಯಿತು. ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು
ಅತ್ತ ರಾಜ್ಯಸಭೆಯಲ್ಲೂ ಇದೇ ವಿಚಾರ ಪ್ರಸ್ತಾಪವಾಗಿ ಗದ್ದಲ, ಕೋಲಾಹಲ ಉಂಟಾಯಿತು. ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು ಹಾಗೂ ಜೆಪಿ ನಡ್ಡಾ, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಭಾರತದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಹಗರುವಾಗಿ ತೆಗೆದುಕೊಳ್ಳುವುದಿಲ್ಲ. ಇದರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಸ್ಪಷ್ಪಪಡಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಗದಲ್ಲ ಉಂಟಾದರಿಂದ ಸಭಾಪತಿ ಜಗದೀಪ್ ಧಂಖರ್ ಮಧ್ಯಾಹ್ನ 2ಗಂಟೆಯವರೆಗೂ ಕಲಾಪ ಮುಂದೂಡಿದರು.
Advertisement