
ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೇತ್ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹತ್ವದ ಮಾತುಕತೆ ನಡೆಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಕ್ಸೆತ್ ಅವರೊಂದಿಗೆ ಚರ್ಚೆ ನಡೆಸಿದ್ದು, ಪಾಕಿಸ್ತಾನ ಭಯೋತ್ಪಾದನೆಯ ಮೂಲ ಹಾಗೂ ಅದರ ವಿರುದ್ಧದ ಮೌನವಾಗಿ ಉಳಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು (ಮೇ 1) ಅಮೆರಿಕ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೇತ್ ಅವರೊಂದಿಗೆ ಮಾತನಾಡಿದರು.
ಈ ವೇಳೆ ರಾಜನಾಥ್ ಸಿಂಗ್ 'ಪಾಕಿಸ್ತಾನವು ಬಹಳ ಸಮಯದಿಂದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಅಮೆರಿಕದ ರಕ್ಷಣಾ ಸಚಿವರಿಗೆ ತಿಳಿಸಿದ್ದಾರೆ. ಅಲ್ಲದೆ ಉಗ್ರರಿಗೆ ನೇರವಾಗಿಯೇ ತರಬೇತಿ ನೀಡುವುದಲ್ಲದೆ, ಶಸ್ತ್ರಾಸ್ತ್ರಗಳು ಮತ್ತು ಹಣವನ್ನು ಸಹ ಒದಗಿಸುತ್ತಿದ್ದಾರೆ' ಎಂದು ಹೇಳಿದ್ದಾರೆ.
"ಪಾಕಿಸ್ತಾನವು ಒಂದು ರಾಕ್ಷಸ ರಾಷ್ಟ್ರವಾಗಿದ್ದು, ಜಾಗತಿಕ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಮತ್ತು ಪ್ರದೇಶವನ್ನು ಅಸ್ಥಿರಗೊಳಿಸುತ್ತಿದೆ ಎಂದು ಬಹಿರಂಗಗೊಂಡಿದೆ. ಭಯೋತ್ಪಾದನೆಯತ್ತ ಜಗತ್ತು ಇನ್ನು ಮುಂದೆ ಕಣ್ಣು ಮುಚ್ಚಿಕೊಂಡು ಇರಲು ಸಾಧ್ಯವಿಲ್ಲ" ಎಂದು ರಕ್ಷಣಾ ಸಚಿವರು ಹೇಳಿದ್ದಾರೆ ಎಂದು ಹೇಳಲಾಗಿದೆ.
ಈ ಭೀಕರ ದಾಳಿಯ ಹಿಂದೆ ಗಡಿಯಾಚೆಗಿನ ಸಂಬಂಧವಿದೆ ಎಂದು ಉಲ್ಲೇಖಿಸಿ, ದಾಳಿಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭಾರತ ಭರವಸೆ ನೀಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ರಾಜನಾಥ್ ಸಿಂಗ್ ಅವರ ಸುಮಾರು 40 ನಿಮಿಷಗಳ ಭೇಟಿಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎನ್ನಲಾಗಿದೆ.
ಭಾರತದ ಜೊತೆ ನಿಲ್ಲುವುದಾಗಿ ಅಮೆರಿಕ ಭರವಸೆ
ಇದೇ ವೇಳೆ ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಕ್ಕೆ ಅಮೆರಿಕದ ರಕ್ಷಣಾ ಸಚಿವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಭಯೋತ್ಪಾದನೆಯ ವಿರುದ್ಧ ಅಮೆರಿಕ ಭಾರತದ ಜೊತೆ ನಿಲ್ಲುತ್ತದೆ ಎಂದು ಹೇಳಿ, ಭಾರತದ ಆತ್ಮರಕ್ಷಣೆಯ ಹಕ್ಕಿಗೆ ಅವರು ತಮ್ಮ ಸಂಪೂರ್ಣ ಬೆಂಬಲವನ್ನು ಪುನರುಚ್ಚರಿಸಿದ್ದಾರೆ.
ಪಾಕಿಸ್ತಾನದಿಂದಲೂ ಅಮೆರಿಕಕ್ಕೆ ಮನವಿ
ಇನ್ನೊಂದೆಡೆ, ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಸಹ ಈ ವಿಷಯದಲ್ಲಿ ಹಿಂದೆ ಬೀದ್ದಿಲ್ಲ, ಅವರು ಸಹ ಅಮೆರಿಕವನ್ನೂ ಸಂಪರ್ಕಿಸಿ ತಮ್ಮನ್ನು 'ಬಲಿಪಶು' ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಇದರೊಂದಿಗೆ, ಅವರು ಸಿಂಧೂ ಜಲ ಒಪ್ಪಂದವನ್ನು ಪ್ರಸ್ತಾಪಿಸಿ ಭಾರತದ ನಿಲುವು ದಕ್ಷಿಣ ಏಷ್ಯಾದ ಶಾಂತಿಗೆ ಬೆದರಿಕೆಯಾಗಿದೆ ಎಂದು ಪ್ರತಿಪಾದಿಸಿದರು.
ಆದರೆ ಈ ಬಾರಿ ಅಮೆರಿಕ ಯಾವುದೇ ಮೃದುತ್ವವನ್ನು ತೋರಿಸಿಲ್ಲ. ಪಾಕಿಸ್ತಾನ ಈ ದಾಳಿಯನ್ನು ಸಾರ್ವಜನಿಕವಾಗಿ ಖಂಡಿಸಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ರುಬಿಯೊ ಸ್ಪಷ್ಟವಾಗಿ ಹೇಳಿದ್ದಾರೆ. ಜೊತೆಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಿ ನೇರ ಸಂಪರ್ಕವನ್ನು ಪುನಃಸ್ಥಾಪಿಸಲು ಸಹಾಯ ಮಾಡುವಂತೆ ಕೇಳಿ ಕೊಂಡಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, ಪಾಕಿಸ್ತಾನವು ಗಡಿಯಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕರು ಮತ್ತು ವಿಮಾನ ನಿಗ್ರಹ ಬಂದೂಕುಗಳನ್ನು ನಿಯೋಜಿಸಿದೆ ಎಂಬ ಸುದ್ದಿ ಇದೆ. ಆದರಂತೆ, ಭಾರತೀಯ ಸೇನೆಯ ಪ್ರಕಾರ, ಪಾಕಿಸ್ತಾನ ಏಕಪಕ್ಷೀಯವಾಗಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಎರಡೂ ದೇಶಗಳ ಮಿಲಿಟರಿ ಅಧಿಕಾರಿಗಳ ನಡುವೆ ದೂರವಾಣಿ ಸಂಭಾಷಣೆ ನಡೆದಿದ್ದು, ಎಲ್ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಕ್ರಮವನ್ನು ಸಹಿಸಲಾಗುವುದಿಲ್ಲ ಎಂದು ಭಾರತ ಸ್ಪಷ್ಟವಾಗಿ ಹೇಳಿದೆ.
Advertisement