
ನವದೆಹಲಿ: ರಾಷ್ಟ್ರದ ಹಿತಾಸಕ್ತಿ ವಿಚಾರದಲ್ಲಿ ನನಗೆ ಜವಾಬ್ದಾರಿ ನೀಡಿರುವುದು ಗೌರವ ತಂದಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಶನಿವಾರ ಹೇಳಿದ್ದಾರೆ.
ಪಾಕಿಸ್ತಾನದ ವಿರುದ್ದ ಬೃಹತ್ ರಾಜತಾಂತ್ರಿಕ ದಾಳಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ತಲಾ 5 ಸಂಸದರನ್ನು ಒಳಗೊಂಡ 5-6 ಸಂಸದರ ನೇತೃತ್ವದ ನಿಯೋಗವೊಂದನ್ನು ವಿಶ್ವದ ವಿವಿಧ ದೇಶಗಳಿಗೆ ರವಾನಿಸಲು ನಿರ್ಧರಿಸಿದ್ದು, ಇದರಂತೆ ಇಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿವಿಧ ಪಕ್ಷಗಳ ಏಳು ಸಂಸದರ ನೇತೃತ್ವದ ನಿಯೋಗಗಳನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದ್ದು, ಸರ್ವಪಕ್ಷದ ನೇತೃತ್ವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ನೀಡಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್ ಅವರು, "ಇತ್ತೀಚಿನ ಘಟನೆಗಳ ಕುರಿತು ನಮ್ಮ ರಾಷ್ಟ್ರದ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ಐದು ಪ್ರಮುಖ ರಾಷ್ಟ್ರಗಳಿಗೆ ಸರ್ವಪಕ್ಷ ನಿಯೋಗವನ್ನು ಮುನ್ನಡೆಸಲು ಭಾರತ ಸರ್ಕಾರ ನನಗೆ ಆಹ್ವಾನ ನೀಡಿರುವುದು ನನಗೆ ಗೌರವ ತಂದಿದೆ ಎಂದು ಹೇಳಿದ್ದಾರೆ.
ಸರ್ಕಾರ ತೆಗೆದುಕೊಂಡ ನಿರ್ಧಾರದಲ್ಲಿ ರಾಷ್ಟ್ರದ ಹಿತಾಸಕ್ತಿ ಇರುವಾಗ, ಅದರಲ್ಲಿ ನನ್ನ ಸೇವೆ ಅಗತ್ಯವಿರುವಾಗ ಅದರಲ್ಲಿ ಲೋಪಗಳನ್ನು ಹುಡುಕುವುದಿಲ್ಲ. ಜೈ ಹಿಂದ್ ಎಂದು ತಿಳಿಸಿದ್ದಾರೆ.
ಆಪರೇಷನ್ ಸಿಂಧೂರ್ ನಂತರ ಕೇಂದ್ರ ಸರ್ಕಾರವನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್, ತಮ್ಮ ಪಕ್ಷದಲ್ಲೇ ಟೀಕೆಗೆ ಒಳಗಾಗಿದ್ದರು. ಇದೀಗ ಅವರು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಭಾರತದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲು ಸರ್ವಪಕ್ಷ ನಿಯೋಗದ ನೇತೃತ್ವ ವಹಿಸಲಿದ್ದಾರೆ.
Advertisement