
ನವದೆಹಲಿ: ಕೇಂದ್ರದ ಎನ್ಡಿಎ ನೇತೃತ್ವದ ಸರ್ಕಾರವು ಮುಂಬರುವ ಸಂಸತ್ ಮಳೆಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಏಪ್ರಿಲ್ 8 ರ ರಾತ್ರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಣನೀಯ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳ ನಂತರ ಅಲಹಾಬಾದ್ ಹೈಕೋರ್ಟ್ನ ನ್ಯಾಯಾಧೀಶ ಸ್ಥಾನಕ್ಕೆ ರಾಜೀನಾಮೆ ನೀಡುವ ಆಯ್ಕೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.
ವಿಶ್ವಾಸಾರ್ಹ ಮೂಲಗಳ ಪ್ರಕಾರ, ಸರ್ಕಾರವು ಸಂಬಂಧಿತ ಸಚಿವಾಲಯದ ಮೂಲಕ ಮಹಾಭಿಯೋಗ ಪ್ರಕ್ರಿಯೆಯನ್ನು ಆರಂಭಿಸುವ ಸಾಧ್ಯತೆ ಇದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಸಭೆ ನಡೆಸಿದ್ದು, ಈ ಬೆಳವಣಿಗೆ ನ್ಯಾಯಮೂರ್ತಿ ವರ್ಮಾ ವಿರುದ್ಧದ ವಿಚಾರಣೆಯ ಸಂಭಾವ್ಯತೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ.
ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ರಚಿಸಿದ್ದ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯು ನ್ಯಾಯಮೂರ್ತಿ ವರ್ಮಾ ಅವರಿಗೆ ಕ್ಲೀನ್ ಚಿಟ್ ನೀಡಿಲ್ಲ ಎಂದು ವರದಿಯಾಗಿದೆ.
ಸಮಿತಿಯ ತನಿಖೆಯಲ್ಲಿ ನ್ಯಾಯಾಧೀಶರ ನಿವಾಸದಲ್ಲಿ ಪತ್ತೆಯಾದ ಸುಟ್ಟುಹೋದ ಕರೆನ್ಸಿ ನೋಟುಗಳ ಛಾಯಾಚಿತ್ರಗಳು ಮತ್ತು ವಿಡಿಯೋವನ್ನು ಒಳಗೊಂಡಿವೆ ಎಂದು ಹೇಳಲಾಗುತ್ತದೆ. ಈ ಬೆಳವಣಿಗೆಗಳ ಹೊರತಾಗಿಯೂ, ಇನ್ನೂ ಯಾವುದೇ ಪ್ರಥಮ ಮಾಹಿತಿ ವರದಿ(ಎಫ್ಐಆರ್) ದಾಖಲಾಗಿಲ್ಲ ಮತ್ತು ನ್ಯಾಯಮೂರ್ತಿ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿಲ್ಲ.
ಇನ್ನು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. "ನ್ಯಾಯಾಂಗ ಸ್ವಾತಂತ್ರ್ಯವು ಹೊಣೆಗಾರಿಕೆ ಮತ್ತು ಕಾನೂನುಬದ್ಧ ಪ್ರಕ್ರಿಯೆಗೆ ಅಡ್ಡಿಯಾಗಬಾರದು" ಎಂದು ಅವರು ಹೇಳಿದ್ದಾರೆ. ಅಲ್ಲದೆ ಅಂತಹ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ.
Advertisement