
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ ಎಂದು ಪ್ರಾರ್ಥಿಸುತ್ತೇನೆಂದೂ ತಿಳಿಸಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಖರ್ಗೆಯವರ ಆರೋಗ್ಯ ಕುರಿತು ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ ಅವರು, ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿರವಾಗಿದೆ. ಅಕ್ಟೋಬರ್ 3 ರಿಂದ ತಮ್ಮ ಕೆಲಸವನ್ನು ಪುನರಾರಂಭಿಸುವ ನಿರೀಕ್ಷೆಯಿದೆ. ಅವರ ಎಲ್ಲಾ ನಿಗದಿತ ಕಾರ್ಯಯೋಜನೆಗಳಿಗೆ ಹಾಜರಾಗುತ್ತಾರೆ. ಎಲ್ಲರೂ ನೀಡಿದ ಕಾಳಜಿ, ಬೆಂಬಲ ಮತ್ತು ಪ್ರೀತಿಗೆ ನಮ್ಮ ಕೃತಜ್ಞತೆಗಳು ಎಂದು ಹೇಳಿದ್ದಾರೆ.
Advertisement