
ನವದೆಹಲಿ: ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ದೆಹಲಿಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ) ಆರೋಪಿಸಿದ ನಂತರ ಚುನಾವಣಾ ಆಯೋಗವು ಅವರಿಗೆ ನೋಟಿಸ್ ನೀಡಿದೆ.
ಜಂಗ್ಪುರ ಮತ್ತು ನವದೆಹಲಿ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಖೇರಾ ಅವರ ಹೆಸರು ಕಾಣಿಸಿಕೊಂಡಿದೆ.
ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 17 ಮತ್ತು ಸೆಕ್ಷನ್ 18ರ ಅಡಿಯಲ್ಲಿ ಕಾಂಗ್ರೆಸ್ ನಾಯಕನಿಗೆ ನೋಟಿಸ್ ನೀಡಲಾಗಿದೆ. ಈ ಕಾಯ್ದೆ ಪ್ರಕಾರ ಒಬ್ಬ ವ್ಯಕ್ತಿ ಒಂದೇ ಕ್ಷೇತ್ರದಲ್ಲಿ ಮತದಾರರ ಗುರುತಿನ ಚೀಟಿ ಹೊಂದಿರಬೇಕು. ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಅಥವಾ ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸುವುದನ್ನು ನಿಷೇಧಿಸುತ್ತದೆ.
ಚುನಾವಣಾ ಆಯೋಗ ಖೇರಾ ಅವರಿಗೆ ನೀಡಿದ ನೋಟಿಸ್ನಲ್ಲಿ, "ನಿಮಗೆ ತಿಳಿದಿರುವಂತೆ, ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವುದು ಜನತಾ ಪ್ರಾತಿನಿಧ್ಯ ಕಾಯ್ದೆ, 1950 ರ ಅಡಿಯಲ್ಲಿ ದಂಡನೀಯ ಅಪರಾಧವಾಗಿದೆ.
ಆದ್ದರಿಂದ ಈ ಕಾಯ್ದೆಯಡಿಯಲ್ಲಿ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಕಾರಣ ತಿಳಿಸಲು ನಿಮಗೆ ನಿರ್ದೇಶಿಸಲಾಗಿದೆ." ಚುನಾವಣಾ ಕಾನೂನಿನಡಿಯಲ್ಲಿ, ಒಂದಕ್ಕಿಂತ ಹೆಚ್ಚು ಸಕ್ರಿಯ ಮತದಾರರ ಗುರುತಿನ ಚೀಟಿಗಳನ್ನು ಹೊಂದಿರುವುದು ಒಂದು ವರ್ಷದವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಬಹುದು.
ನಿಮ್ಮ ಉತ್ತರವನ್ನು ಸೆಪ್ಟೆಂಬರ್ 8 ರಂದು ಬೆಳಗ್ಗೆ 11 ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ವಿವರಣೆ ಸಲ್ಲಿಸುವಂತೆ ಖೇರಾ ಅವರಿಗೆ ಸೂಚಿಸಲಾಗಿದೆ. ಅಲ್ಲದೆ ಗಡುವಿನೊಳಗೆ ಪ್ರತಿಕ್ರಿಯಿಸಲು ವಿಫಲವಾದರೆ ಕಾನೂನಿನ ಪ್ರಕಾರ ಮುಂದುವರಿಯುವುದಾಗಿ ಚುನಾವಣಾ ಆಯೋಗ ಎಚ್ಚರಿಸಿದೆ.
ಬಿಜೆಪಿಯ ಆರೋಪಗಳು ಮತ್ತು ಚುನಾವಣಾ ಆಯೋಗದ ನೋಟಿಸ್ಗೆ ಪ್ರತಿಕ್ರಿಯಿಸಿದ ಖೇರಾ, ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಹೆಸರು ಕಾಣಿಸಿಕೊಂಡಿರುವುದಕ್ಕೆ ಚುನಾವಣಾ ಆಯೋಗವೇ ಕಾರಣ ಎಂದು ತಿರುಗೇಟು ನೀಡಿದ್ದಾರೆ.
ಖೇರಾ ಅವರು 2016 ರಲ್ಲಿ ನವದೆಹಲಿ ಕ್ಷೇತ್ರದಿಂದ ಹೊರಗೆ ಹೋಗಿದ್ದರು ಮತ್ತು ಅಲ್ಲಿಂದ ತಮ್ಮ ಹೆಸರನ್ನು ತೆಗೆದು ಹಾಕಲು ಅರ್ಜಿ ಸಲ್ಲಿಸಿರುವುದಾಗಿ ಹೇಳಿದ್ದಾರೆ.
“ನವದೆಹಲಿ ಕ್ಷೇತ್ರದಲ್ಲಿ ನನ್ನ ಹೆಸರಿನಲ್ಲಿ ಯಾರಿಗೆ ಮತ ಚಲಾಯಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಚುನಾವಣಾ ಆಯೋಗದಿಂದ ತಿಳಿದುಕೊಳ್ಳಲು ನಾನು ಬಯಸುತ್ತೇನೆ. ನನಗೆ ಸಿಸಿಟಿವಿ ದೃಶ್ಯಾವಳಿ ಬೇಕು. ನಾನು 2016 ರಲ್ಲಿ ಅಲ್ಲಿಂದ ಸ್ಥಳಾಂತರಗೊಂಡೆ. ಅಲ್ಲಿಂದ ನನ್ನ ಹೆಸರನ್ನು ತೆಗೆದು ಹಾಕಲು ನಾನು ಕಾರ್ಯವಿಧಾನವನ್ನು ಅನುಸರಿಸಿ ಅರ್ಜಿ ಸಲ್ಲಿಸಿದ್ದೇನೆ. ಆದರೂ ನನ್ನ ಹೆಸರು ಇನ್ನೂ ಏಕೆ ಇದೆ?” ಎಂದು ಖೇರಾ ಪ್ರಶ್ನಿಸಿದ್ದಾರೆ.
Advertisement